ಬೆಂಗಳೂರು: ಚಾಲಾಕಿತನದಿಂದ ರಾಜ್ಯದ ಜನರ ಮೇಲೆ ಹೆಚ್ಚುವರಿ ತೆರಿಗೆ ಹೇರದೆ, ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಅನುಮೋದಿಸಿರುವ ಜಿಎಸ್'ಟಿ ಸುಧಾರಣೆಗಳನ್ನು ಜನರಿಗೆ ತಲುಪಿಸಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅನುಮೋದಿಸಿರುವ ಜಿ.ಎಸ್.ಟಿ ಸುಧಾರಣೆಗಳು, ರಾಜ್ಯದ ಜನರನ್ನು ಸಂಪೂರ್ಣವಾಗಿ ತಲುಪುವಂತೆ ನೋಡಿಕೊಳ್ಳಬೇಕು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೊಂದಿಗೆ ಮಾಡಿದಂತೆ, ಜನರಿಗೆ ಪ್ರಯೋಜನದಲ್ಲಿ ವ್ಯತ್ಯಯ ಉಂಟಾಗುವಂತೆ, ರಾಜ್ಯ ಮಟ್ಟದಲ್ಲಿ ಹೆಚ್ಚುವರಿ ತೆರಿಗೆಗಳನ್ನು ಚಾಲಾಕಿತನದಿಂದ ಹೇರಬಾರದು ಎಂದು ಟಾಂಗ್ ನೀಡಿದ್ದಾರೆ.
ಜಿ.ಎಸ್.ಟಿ ಸುಧಾರಣೆಗಳು ರಾಜ್ಯದ ಆದಾಯ ನಷ್ಟಕ್ಕೆ ಕಾರಣವಾಗುತ್ತದೆ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಈಗಾಗಲೇ ಹೆಚ್ಚುವರಿ ತೆರಿಗೆ ಹೇರಲು ಪೂರಕ ವಾದ ಮಂಡಿಸುತ್ತಿರುವಂತೆ ತೋರುತ್ತಿದೆ. ಪ್ರತಿಯೊಬ್ಬ ನಾಗರಿಕ ಮತ್ತು ಗ್ರಾಹಕರಿಗೆ ಪ್ರಯೋಜನ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಜಿ.ಎಸ್.ಟಿ ಸುಧಾರಣೆಗಳನ್ನು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು.
ಆದಾಯ ನಷ್ಟ ಮತ್ತು ಸಹಕಾರ ಒಕ್ಕೂಟ ವ್ಯವಸ್ಥೆ ವಿಷಯವನ್ನು ಯಾವಾಗಲೂ ಎತ್ತುವ ರಾಜ್ಯ ಸರ್ಕಾರ, ತಮ್ಮ ಗ್ಯಾರಂಟಿ ಯೋಜನೆಗಳ ಹೊರೆಯು, ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಹೇಗೆ ಹಾಳು ಮಾಡಿದೆ ಎನ್ನುವುದರ ಬಗ್ಗೆ ಮಾತನಾಡುವುದಿಲ್ಲ. ಈಗ ಜಿ.ಎಸ್.ಟಿ ಯಲ್ಲಿ ಸುಧಾರಣೆಗಳಾದಂತೆ, ರಾಜ್ಯ ಸರ್ಕಾರ ಕೂಡ ತನ್ನ ಗ್ಯಾರಂಟಿ ಯೋಜನೆಗಳಲ್ಲಿ ಸುಧಾರಣೆ ತರುವ ಬಗ್ಗೆ ಆಲೋಚಿಸಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಒಂದು ಕೈಯಿಂದ ಉದಾರವಾಗಿ ನೀಡಿದಂತೆ ಮಾಡಿ, ಇನ್ನೊಂದು ಕೈಯಿಂದ ಕಿತ್ತುಕೊಳ್ಳುತ್ತಿದ್ದು, ಈಗಲಾದರೂ ಜನರನ್ನು ಮೂರ್ಖರನ್ನಾಗಿ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನರಿಗೆ ನೆರವಾಗುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರವು ಜಿಎಸ್ಟಿ ದರಗಳಲ್ಲಿ ಮಹತ್ವದ ಪರಿಷ್ಕರಣೆ ಘೋಷಿಸಿ ಬುಧವಾರ ಘೋಷಣೆ ಮಾಡಿತ್ತು. ಅದರಂತೆ, ಶೇ 12 ಮತ್ತು 28ರ ಸ್ಲ್ಯಾಬ್ಗಳನ್ನು ರದ್ದುಗೊಳಿಸಿ, ಶೇ 5 ಮತ್ತು 18ರ ಸ್ಲ್ಯಾಬ್ಗಳನ್ನು ಉಳಿಸಿಕೊಳ್ಳಲಾಗಿದ್ದು, ಇದರು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ. ಆಹಾರ ವಸ್ತುಗಳು,ಕಲಿಕಾ ಸಾಮಗ್ರಿಗಳು ಹಾಗೂ ವೈಯಕ್ತಿಕ, ಆರೋಗ್ಯ ವಿಮೆಗೆ ಜಿಎಸ್ಟಿ ವಿನಾಯಿತಿ ನೀಡಲಾಗಿದೆ. ಆದರೆ, ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಕಾಂಗ್ರೆಸ್ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಈ ನಡುವೆ ಜಿಎಸ್ಟಿ ದರ ಇಳಿಕೆಯಿಂದ ದೇಶದ ಮಧ್ಯಮ ಮತ್ತು ಸಣ್ಣ ಗಾತ್ರದ ಉದ್ದಿಮೆಗಳಿಗೆ ಉತ್ತೇಜನ ಸಿಗಲಿದ್ದು, ರಾಜ್ಯಗಳಿಗೆ ಆದಾಯದಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.