ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಕಮಿಷನ್ ಪಡೆಯುತ್ತಿರುವ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಇದರಿಂದ ರಾಜ್ಯ ಸರ್ಕಾರ ಶೇ.80ರಷ್ಟು ಕಮಿಷನ್ ಪಡೆಯುತ್ತಿರುವುದು ಸಾಬೀತಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಸರ್ಕಾರದಲ್ಲಿ ಶೇ.40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರ ದುಪ್ಪಟ್ಟು ಕಮಿಷನ್ ಪಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಅಂದರೆ ಇದು ಶೇ.80ರಷ್ಟು ಕಮಿಷನ್ ಸರ್ಕಾರ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇ.40 ಕಮಿಷನ್ ಸುಳ್ಳು ಆರೋಪ ಮಾಡಿದ್ದರು. ಈಗ, ಗುತ್ತಿಗೆದಾರರ ಸಂಘವು ಕಾಂಗ್ರೆಸ್ ಸರ್ಕಾರ ಎರಡು ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ಸಿಎಂಗೆ ಪತ್ರ ಬರೆದಿದೆ. ಇದರರ್ಥ ಈ ಸರ್ಕಾರ ಹೆಚ್ಚು ಕಮಿಷನ್ ಪಡೆಯುತ್ತಿದೆ ಎಂಬುದು ಸಾಬೀತಾಗಿದೆ. ಸರ್ಕಾರಕ್ಕೆ ಸ್ವಾಭಿಮಾನವಿದ್ದರೆ, ಸಿಎಂ ಸಿದ್ದರಾಮಯ್ಯ ಹಾಗೂ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು. ಸಚಿವ ಸಂಪುಟವನ್ನು ವಿಸರ್ಜಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ, ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನದಾಸ್ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವ ಕಾರಣಕ್ಕೆ ಈ ಕ್ರಮ ವಹಿಸಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು-ನೋವು ಉಂಟಾಗಿದೆ. ಕಲಬುರಗಿ ಹಾಗೂ ಬೀದರ್ನಲ್ಲಿ ಹೆಚ್ಚು ಹಾನಿಯಾಗಿದೆ. ಆದರೆ, ಈವರೆಗೂ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಈ ಸರ್ಕಾರದಲ್ಲಿ ಹಣ ಇದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣ ಇಲ್ಲದೆ ಸಚಿವರು ಹಾಗೂ ಮುಖ್ಯಮಂತ್ರಿ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಈ ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆ ಕಡೆಗಿದೆ. ಪ್ರವಾಹದಿಂದ ಮನೆ ಹಾನಿ ಹಾಗೂ ಬೆಳೆ ಹಾನಿ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಆರ್.ಅಶೋಕ್ ಆಗ್ರಹಿಸಿದರು.
ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರ ಹಣ ನೀಡಲಿದೆ. ರಾಜ್ಯ ಸರ್ಕಾರದಿಂದ ತಕ್ಷಣ 3 ಸಾವಿರ ಕೋಟಿ ರು. ಪರಿಹಾರ ಘೋಷಿಸಿ ವಿತರಿಸಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರದಲ್ಲಿ ಅರ್ಧ ಕೆ.ಜಿ. ಅಕ್ಕಿ ಕೊಟ್ಟಿಲ್ಲ. ಈಗಾಗಲೇ ನಮ್ಮ ಪಕ್ಷದಿಂದ ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನೂ ಪ್ರವಾಸ ಮಾಡಿ ಈ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಜಾತಿ ಸಮೀಕ್ಷೆ ಕುರಿತು ಮಾತನಾಡಿದ ಅವರು, ಜಾತಿ ಸಮೀಕ್ಷೆಯಲ್ಲಿ ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ತಮಗೆ ಬೇಕಾದ ಜಾತಿಗಳ ಸಂಖ್ಯೆ ಹೆಚ್ಚಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮೀಕ್ಷೆಗೆ ಪೂರ್ವ ತಯಾರಿ ಮಾಡಿಲ್ಲ. ಕೇವಲ 15 ದಿನಗಳಲ್ಲಿ ಸಮೀಕ್ಷೆ ಮುಗಿಸಿ ಎಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಇದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಮಾಡುತ್ತಿರುವ ಸಮೀಕ್ಷೆ ಎಂದು ಆಕ್ರೋಶ ವ್ಯಕ್ತಪಡಿಸಿದರು.