ಬೆಂಗಳೂರು: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಇದೀಗ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಅಸಮಾಧಾನ ಬದಿಗಿಟ್ಟು ಪ್ರಚಾರಕ್ಕಿಳಿಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.
ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಜಮೀರ್ ಅಗತ್ಯವಿಲ್ಲ ಎಂಬ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೇಳಿಕೆಯಿಂದ ಜಮೀರ್ ಅವರು ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಚಾರದಿಂದ ದೂರ ಉಳಿದು ಕೇರಳ ವಿಧಾನಸಭೆ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
ಇದೀಗ ಮಲ್ಲಿಕಾರ್ಜುನ ಪುತ್ರ ಸಮರ್ಥ ಶಾಮನೂರು ಹಾಗೂ ದಾವಣಗೆರೆ ಸಂಸದ ಪ್ರಭಾ ಮಲ್ಲಿಕಾರ್ಜುನ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದರೂ, ಇನ್ನೂ ಕೆಲ ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಕಾಂಗ್ರೆಸ್ ಮತಬ್ಯಾಂಕ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಸಾದಿಕ್ ಪೈಲ್ವಾನ್ ಅವರನ್ನು ಮನವೊಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಕೆಲವು ಮುಸ್ಲಿಂ ಯುವಕರನ್ನು ಸಮಾಧಾನಪಡಿಸಲು ವಿಫಲರಾಗಿದ್ದಾರೆ ಎನ್ನಲಾಗಿದ್ದು, ಈ ಯುವಕರ ಒಂದು ವಲಯ ಇನ್ನೂ ಸಕ್ರಿಯವಾಗಿದ್ದು, ಇದು ಪಕ್ಷಕ್ಕೆ ಸವಾಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಜಮೀರ್ ಮನವೊಲಿಸಿದ್ದು ಪ್ರಚಾರದಲ್ಲಿ ತೊಡಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಜಮೀರ್ ಅವರು ಏಪ್ರಿಲ್ 5, 6 ಮತ್ತು 7ರಂದು ಪ್ರಚಾರ ನಡೆಸಲು ಸಜ್ಜಾಗಿದ್ದಾರೆಂದು ತಿಳಿದುಬಂದಿದೆ. ಜಮೀರ್ ಅವರು ಅಂತಿಮ ಹಂತದಲ್ಲಿ ಪಕ್ಷಕ್ಕೆ ಬಲ ತುಂಬುವ ಉದ್ದೇಶ ಹೊಂದಿದ್ದಾರೆಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ ಜಮೀರ್ ಅಹ್ಮದ್ ಖಾನ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಈ ಮಂಡಳಿಯಲ್ಲಿ ತಾರಿಕ್ ಅನ್ವರ್, ಸಲ್ಮಾನ್ ಖುರ್ಷಿದ್, ಡಾ. ಅಭಿಷೇಕ್ ಮನು ಸಿಂಘ್ವಿ, ಸಯ್ಯದ್ ನಸೀರ್ ಹುಸೇನ್ ಮತ್ತು ಇಮ್ರಾನ್ ಪ್ರತಾಪ್ಗಢಿ ಸೇರಿದಂತೆ ಹಲವು ಪ್ರಮುಖ ನಾಯಕರು ಸದಸ್ಯರಾಗಿದ್ದಾರೆ.