ದಾವಣಗೆರೆ: ಕಾಂಗ್ರೆಸ್ ಪಕ್ಷ ಸರ್ವ ಧರ್ಮ, ಸಕಲ ಜಾತಿಯವರನ್ನೂ ಜೊತೆಗೆ ಕರೆದುಕೊಂಡು ಹೋಗುವ ಪಕ್ಷವಾಗಿದ್ದು, ಬಿಜೆಪಿಗೆ ಅಹಿಂದಾ ಸಮುದಾಯಗಳ ಬಗ್ಗೆ ಯಾವುದೇ ನಿಜವಾದ ಕಾಳಜಿ ಇಲ್ಲ, ಅದು ಶ್ರೀಮಂತರ ಹಿತಾಸಕ್ತಿಗೆ ಆದ್ಯತೆ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆರೋಪಿಸಿದರು.
ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನರಿಂದ ಕಾಂಗ್ರೆಸ್ಗೆ ಅಪಾರ ಬೆಂಬಲ ಸಿಗುತ್ತಿದೆ. ಉಪಚುನಾವಣೆಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳಿದರು.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ದೇಶ ಮತ್ತು ರಾಜ್ಯದ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ ಎಂಬ ಅರಿವು ಮತದಾರರಲ್ಲಿ ಮೂಡಿದೆ. “ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗೆ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ರಾಜ್ಯವನ್ನು ಲೂಟಿ ಮಾಡಿದೆ ಎಂಬುದನ್ನು ಜನರು ಅರಿತಿದ್ದಾರೆಂದು ತಿಳಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿವೆ, “ಬಿಜೆಪಿ ಸುಳ್ಳು ಪ್ರಚಾರ ನಡೆಸಿದರೂ ಜನರು ಕಾಂಗ್ರೆಸ್ ಮೇಲಿನ ನಂಬಿಕೆಯನ್ನು ಕಳೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂಬ ಹೇಳಿಕೆಗಳು ಸುಳ್ಳಾಗಿದೆ. ಯೋಜನೆಗಾಗಿ ಈಗಾಗಲೇ 52 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, 1.31 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು.
ರಾಜ್ಯದ ಸಾಲದ ಬಗ್ಗೆ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರವು ನಿಗದಿತ ಮಿತಿಯೊಳಗೆ ಮಾತ್ರ ಸಾಲ ಪಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಜಿಡಿಪಿ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ. ಒಟ್ಟು ಸಾಲ ಪ್ರಮಾಣ ಶೇ.25 ಮಿತಿಯೊಳಗಿದೆ. ಹಣಕಾಸು ಕೊರತೆ ಶೇ.2.95 ಮಾತ್ರ ಇದೆ” ಎಂದು ಹೇಳಿದರು.
ಇದೇ ವೇಳೆ ರಾಜ್ಯಕ್ಕೆ ಕೇಂದ್ರದಿಂದ ಅನುದಾನ ಬಿಡುಗಡೆಯಾಗದಿರುವುದರಿಂದ ಆದಾಯ ಮಿತಿಲಾಭ ಸಾಧಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದ ಅವರು, ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ಜಿಎಸ್ಟಿ ದರ ಕಡಿತದಿಂದ ಕರ್ನಾಟಕಕ್ಕೆ 10 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಹೇಳಿದರು. ಜಿಎಸ್ಟಿ ಬೆಳವಣಿಗೆ ದರ ಶೇ,10 ರಿಂದ ಶೇ.4ಕ್ಕೆ ಕುಸಿದಿದೆ ಎಂದೂ ಹೇಳಿದರು.
ಬಳಿಕ ರಾಜ್ಯಕ್ಕೆ ಬಾಕಿ ಇರುವ ಜಿಎಸ್ಟಿ ಪರಿಹಾರ ಮತ್ತು ವಿಶೇಷ ಅನುದಾನಗಳನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಶ್ವೇತಪತ್ರ ಹೊರಡಿಸುವ ಆಗ್ರಹ ಅಸಂಬದ್ಧ ಎಂದು ಹೇಳಿದರು.
ಸಾಲದ ದಾಖಲೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲಾ ವಿವರಗಳನ್ನು ಬಜೆಟ್ನಲ್ಲಿ ಸ್ಪಷ್ಟವಾಗಿ ನೀಡಲಾಗಿದೆ ಎಂದು ಹೇಳಿದರು.
ಬಿಜೆಪಿ ಅವಧಿಯಲ್ಲಿ 5.30 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಗುತ್ತಿಗೆದಾರರ 29 ಸಾವಿರ ಕೋಟಿ ರೂ. ಬಾಕಿ ಬಿಲ್ಲುಗಳಲ್ಲಿ ಈಗಾಗಲೇ 24 ಸಾವಿರ ಕೋಟಿ ರೂ. ಪಾವತಿಸಲಾಗಿದೆ ಎಂದು ವಿವರಿಸಿದರು.
ಮಧ್ಯಪ್ರಾಚ್ಯ ಸಂಘರ್ಷದಿಂದ ಉಂಟಾಗುವ ಬೆಲೆ ಏರಿಕೆ ಬಗ್ಗೆ ಮಾತನಾಡಿ, ದರ ನಿಯಂತ್ರಣದ ಹೊಣೆಗಾರಿಕೆ ಕೇಂದ್ರದ ಮೇಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಪೂರೈಸುವ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ವಿತರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದು, ಕರ್ನಾಟಕದಲ್ಲಿ ಪೆಟ್ರೋಲಿಯಂ ಬೆಲೆಗಳು ನೆರೆಯ ರಾಜ್ಯಗಳಿಗಿಂತ ಕಡಿಮೆಯಾಗಿದೆ ಎಂದು ತಿಳಿಸಿದರು.
ಒಳ ಮೀಸಲಾತಿ ಅನುಷ್ಠಾನದ ಬಗ್ಗೆ ಸರ್ಕಾರದ ನಿಲುವಿನ ಕುರಿತು ಮಾತನಾಡಿದ, ರಾಜ್ಯಾದ್ಯಂತ ಒಳ ಮೀಸಲಾತಿ ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.