ದಾವಣಗೆರೆ: ಗ್ಯಾರಂಟಿ ಯೋಜನೆಗಳಿಲ್ಲದಿದ್ದರೆ ಜನರು ಭಾರೀ ಸಂಕಷ್ಟ ಅನುಭವಿಸಬೇಕಾಗುತ್ತಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು. ಇಲ್ಲಿನ ಅಭಿವೃದ್ಧಿ ಬೆಂಗಳೂರಿನ ಮಟ್ಟಕ್ಕೆ ಸಮಾನವಾಗಿದೆ” ಎಂದು ಹೇಳಿದರು. ಇದೇ ವೇಳೆ ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅವರ ದೂರದೃಷ್ಟಿಯನ್ನು ಕೊಂಡಾಡಿದರು.
“ಈ ಕ್ಷೇತ್ರದಲ್ಲಿ ಶೇ.98ರಷ್ಟೀು ಮಹಿಳೆಯರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಸುಮಾರು 60,000 ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 61,000 ಕುಟುಂಬಗಳು ಗೃಹಜ್ಯೋತಿ ಯೋಜನೆಯಡಿ ಲಾಭ ಹೊಂದಿವೆ. ಅನ್ನಭಾಗ್ಯ ಯೋಜನೆಯಿಂದ 1.45 ಲಕ್ಷ ಜನರಿಗೆ ಸಹಾಯವಾಗಿದೆ ಎಂದು ವಿವರಿಸಿದರು.
ವಿರೋಧ ಪಕ್ಷಗಳು ಆರೋಪ ಮಾಡುತ್ತಿದ್ದರೂ ಮಹಿಳೆಯರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಶಾಮನೂರು ಶಿವಶಂಕರಪ್ಪ ಅವರ ಸೇವೆಯನ್ನು ಸ್ಮರಿಸಿದ ಡಿಕೆ.ಶಿವಕುಮಾರ್ ಅವರು, ಶಾಮನೂರು ಶಿವಶಂಕರಪ್ಪ ಅವರು ಆಸ್ಪತ್ರೆಗಳು, ಸಮುದಾಯ ಭವನಗಳು, ಶಿಕ್ಷಣ ಸಂಸ್ಥೆಗಳು ನಿರ್ಮಿಸಿ ಜನರಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ. ವ್ಯಾಪಾರಿಗಳು ಕೂಡ ಅವರ ಆಡಳಿತದಲ್ಲಿ ಯಾವುದೇ ತೊಂದರೆ ಎದುರಿಸಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಬಡವರಿಗೆ 15,000 ಮನೆಗಳನ್ನು ಒದಗಿಸಿದ್ದಾರೆ. ಎಲ್ಲಾ ಸಮುದಾಯಗಳಿಗೆ ಪ್ರತ್ಯೇಕ ಜಾಗ ನೀಡಲಾಗಿದೆ. ಸಮರ್ಥ ಶಾಮನೂರಿಗೆ ಇನ್ನಷ್ಟು ಅಂತರದಿಂದ ಗೆಲುವು ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.
ಬಳಿಕ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮಧ್ಯಪ್ರಾಚ್ಯದ ಯುದ್ಧದ ಪರಿಣಾಮ ಬೆಲೆ ಏರಿಕೆಯಾಗಿರುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗಿವೆ ಎಂದು ಹೇಳಿದರು.
ಇದೇ ವೇಳೆ ಎಲ್ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಸರಬರಾಜು ಸರಿಯಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
“ಇದು ಡಿಕೆ ಶಿವಕುಮಾರ್ V/S ಸಿದ್ದರಾಮಯ್ಯ ಸ್ಪರ್ಧೆಯೇ?” ಎಂಬ ಪ್ರಶ್ನೆಗೆ ಉತ್ತರಿಸಿ, “ನಾವು ಒಟ್ಟಿಗೆ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೇವೆ, ಮುಂದೆಯೂ ಒಟ್ಟಿಗೆ ತರ್ತೇವೆ. ಪಕ್ಷದ ಎಲ್ಲಾ ಕಾರ್ಯಕರ್ತರು ನಮ್ಮೊಂದಿಗೆ ಇದ್ದಾರೆ,” ಎಂದು ಸ್ಪಷ್ಟಪಡಿಸಿದರು.
ಲಿಂಗಾಯತ-ಮುಸ್ಲಿಂ ಮತಗಳ ಕುರಿತು ಕೇಳಿದ ಪ್ರಶ್ನೆಗೆ, “ನಾವು ಜಾತಿ ಆಧಾರಿತ ರಾಜಕೀಯ ಮಾಡುವುದಿಲ್ಲ. ಎಲ್ಲಾ ಸಮುದಾಯಗಳು ನಮ್ಮೊಂದಿಗೆ ಇವೆ ಎಂದು ಹೇಳಿದರು.