ದಾವಣಗೆರೆ: ಕರ್ನಾಟಕದಲ್ಲಿ ಉಪ ಚುನಾವಣೆಗೆ ಇನ್ನು ಮೂರು ದಿನ ಬಾಕಿಯಿದೆ. ಕಾಂಗ್ರೆಸ್-ಬಿಜೆಪಿ ನಾಯಕರ ಪ್ರಚಾರ ತೀವ್ರವಾಗಿದೆ. ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವಿರೋಧಿಯಾಗಿರುವ ಕೇಸರಿ ಪಕ್ಷವನ್ನು ಮತದಾರರು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.
ದಾವಣಗೆರೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಗೆ ಮತ ಹಾಕಬೇಡಿ.
ಬಿಜೆಪಿ ನಕಲಿ ಕಥೆ ಕಟ್ಟಲು ಪ್ರಯತ್ನಿಸುತ್ತಿದೆ. ಆದರೆ ರಾಜ್ಯದ ಜನರು ಅದನ್ನು ಸ್ವೀಕರಿಸಲು ಸಿದ್ಧರಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಖರೀದಿ ಶಕ್ತಿ ಹೆಚ್ಚಾಗಿದೆ. ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವವರಿಗೆ ಇದು ಸಹಾಯವಾಗಿದೆ. ಕಾಂಗ್ರೆಸ್ ಸರ್ಕಾರ ಈ ಯೋಜನೆಗಳಿಗೆ 1.36 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂದರು.
ರಾಜ್ಯದಲ್ಲಿ ಎರಡು ಮಾದರಿಗಳಿವೆ — ಒಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಮಾದರಿ, ಮತ್ತೊಂದು ಜನರ ಜೇಬು ಕತ್ತರಿಸುವ ಮಾದರಿ, ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದಿಂದ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಎಲ್ಪಿಜಿ ಸಿಲಿಂಡರ್ ಬೆಲೆ ಸುಮಾರು 400 ರೂಪಾಯಿ ಇತ್ತು. ಈಗ ಅದು 950 ರೂಪಾಯಿ ದಾಟಿದೆ. ಲೀಟರ್ಗೆ 70 ರೂಪಾಯಿ ಇದ್ದ ಪೆಟ್ರೋಲ್ ರೇಟ್ ಈಗ 102 ರೂಪಾಯಿ ದಾಟಿದೆ. ಡೀಸೆಲ್ ಬೆಲೆ 56 ರೂಪಾಯಿಗಳಿಂದ 96 ರೂಪಾಯಿಗೆ ಏರಿಕೆಯಾಗಿದೆ. ಏಪ್ರಿಲ್ 1ರಿಂದ ಟೋಲ್ ದರಗಳನ್ನು ಹೆಚ್ಚಿಸಲಾಗಿದೆ. ಕರ್ನಾಟಕದಲ್ಲಿ ವರ್ಷಕ್ಕೆ 5,000 ಕೋಟಿ ರೂಪಾಯಿ ಟೋಲ್ ತೆರಿಗೆ ಸಂಗ್ರಹವಾಗುತ್ತದೆ. ದೇಶಾದ್ಯಂತ 2.80 ಲಕ್ಷ ಕೋಟಿ ರೂಪಾಯಿ ಟೋಲ್ ತೆರಿಗೆ ಸಂಗ್ರಹವಾಗುತ್ತಿದ್ದರೂ ರಸ್ತೆ ಸ್ಥಿತಿ ಶೋಚನೀಯವಾಗಿದೆ ಎಂದರು.
ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆಯ ನಂತರ ಎಲ್ಪಿಜಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತಷ್ಟು ಏರಿಕೆಯಾಗಲಿವೆ. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಬೆಲೆ ಏರಿಕೆಯನ್ನು ತಾತ್ಕಾಲಿಕವಾಗಿ ನಿಯಂತ್ರಿಸಿಕೊಂಡಿದೆ ಎಂದು ಆರೋಪಿಸಿದರು.
ವಸ್ತುಗಳ ಬೆಲೆ ಏರಿಕೆಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಗ್ಯಾರಂಟಿ ಯೋಜನೆಗಳು ಮುಖ್ಯ. ಕಾಂಗ್ರೆಸ್ ಸರ್ಕಾರ ವರ್ಷಕ್ಕೆ 50,000 ಕೋಟಿ ರೂಪಾಯಿ ಈ ಐದು ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದೆ. ಆದರೆ ಬಿಜೆಪಿ ಇದನ್ನು ನಿಲ್ಲಿಸಲು ಯತ್ನಿಸುತ್ತಿದೆ. ಮತದಾರರು ಸಮರ್ಥ ಶಾಮನೂರು ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ಗೆ ಬೆಂಬಲ ನೀಡಿ ಎಂದರು.