ಸಾಂದರ್ಭಿಕ ಚಿತ್ರ  
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ 'ಕೈ'ಕೊಡುತ್ತಾ ದಾವಣಗೆರೆ ದಕ್ಷಿಣ ?: ಉಪಚುನಾವಣೆ ಫಲಿತಾಂಶದಿಂದ ಆಡಳಿತ ಪಕ್ಷದ ಭವಿಷ್ಯವೇನು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬೆಳವಣಿಗೆ ಬಗ್ಗೆ ತಿಳಿದಿಲ್ಲವೆಂದು ಹೇಳಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸ್ಥಳೀಯ ಪಕ್ಷದ ಅಧಿಕಾರಿಗಳಿಂದ ವರದಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ತನ್ನ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥ ಅಬ್ದುಲ್ ಜಬ್ಬಾರ್ ವಿರುದ್ಧ ಕ್ರಮ ಕೈಗೊಂಡಿರುವುದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಗೆಲುವಿನ ಬಗ್ಗೆ ಪಕ್ಷದ ಆತ್ಮವಿಶ್ವಾಸ ಕಡಿಮೆಯಾಗಿದೆ ಎಂಬುದಕ್ಕೆ ಸೂಚನೆ ನೀಡುತ್ತದೆ.

ಮೂಲಗಳ ಪ್ರಕಾರ, ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್ಸಿ ನಸೀರ್ ಅಹ್ಮದ್ ಅವರಿಗೆ ಕೂಡ ಹುದ್ದೆಯಿಂದ ಕೆಳಗಿಳಿಯಲು ಸೂಚಿಸಲಾಗಿದೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬೆಳವಣಿಗೆ ಬಗ್ಗೆ ತಿಳಿದಿಲ್ಲವೆಂದು ಹೇಳಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸ್ಥಳೀಯ ಪಕ್ಷದ ಅಧಿಕಾರಿಗಳಿಂದ ವರದಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಬೆಳವಣಿಗೆಗೆ ಕಾರಣವೇನು?

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಪ್ರಭಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹೈಕಮಾಂಡ್ ನಾಯಕರು, ಪಕ್ಷದ ಗೆಲುವಿನ ಸಾಧ್ಯತೆಗಳನ್ನು ಹಾಳುಮಾಡಲು ಪ್ರಯತ್ನಿಸಿದ ಕಾಂಗ್ರೆಸ್ ನಾಯಕರ ಕುರಿತು ಎಐಸಿಸಿ ಕಾರ್ಯದರ್ಶಿ ಮತ್ತು ರಾಜ್ಯ ಪ್ರಭಾರಿ ಅಭಿಷೇಕ್ ದತ್ ನೀಡಿದ ವರದಿಯನ್ನು ಈಗಾಗಲೇ ಪಡೆದಿದ್ದರು. ಜೊತೆಗೆ, ಮುಸ್ಲಿಂ ಮತದಾರರ ಗಮನಾರ್ಹ ಭಾಗ ಕಾಂಗ್ರೆಸ್ ಅಭ್ಯರ್ಥಿಗೆ ವಿರುದ್ಧವಾಗಿ ಮತ ಹಾಕಿರುವುದರಿಂದ ಫಲಿತಾಂಶ ಇನ್ನಷ್ಟು ಅನಿಶ್ಚಿತವಾಗಿದೆ ಎಂಬ ವರದಿಗಳೂ ಬಂದಿವೆ.

ಎಸ್‌ಡಿಪಿಐ ಸೇರಿದಂತೆ ಸ್ಪರ್ಧೆಯಲ್ಲಿ ಇದ್ದ ಇತರ ಮುಸ್ಲಿಂ ಅಭ್ಯರ್ಥಿಗಳು ಗಮನಾರ್ಹ ಮತಗಳನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ. ಅವರಿಗೆ ಕೆಲ ಕಾಂಗ್ರೆಸ್ ನಾಯಕರ ಬೆಂಬಲವಿತ್ತು ಎಂಬ ಆರೋಪಗಳೂ ಕೇಳಿಬಂದಿವೆ. ಈ ಪ್ರವೃತ್ತಿ ದೀರ್ಘಾವಧಿಯಲ್ಲಿ ಹಾಗೂ ವಿಶೇಷವಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಪಕ್ಷದ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸೇರಿದಂತೆ ಇತರರು ಶುಕ್ರವಾರ ಪರೋಕ್ಷವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರು ದಾವಣಗೆರೆ ದಕ್ಷಿಣದಲ್ಲಿ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಸಂಚು ರೂಪಿಸಿದ್ದರು ಎಂದು ಪರೋಕ್ಷವಾಗಿ ಹೇಳಿದ್ದರು.

ಮೇ 4ರಂದು ಫಲಿತಾಂಶ ಪ್ರಕಟವಾಗಿದ್ದು, ಸಮರ್ಥ್ ಸೋತರೆ, ಜಮೀರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚುವ ಸಾಧ್ಯತೆ ಇದೆ.

ಜಮೀರ್, ತಮ್ಮ ಆಪ್ತನಾದ ಜಬ್ಬಾರ್ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು. ಇವರಿಬ್ಬರೂ ಸಮರ್ಥ್ ಪರ ಪ್ರಚಾರದಲ್ಲಿ ಭಾಗವಹಿಸಲಿಲ್ಲ. ವಿಶೇಷವೆಂದರೆ, ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಅವರ ಅನೇಕ ಸಹಚರರು ದಾವಣಗೆರೆ ದಕ್ಷಿಣದಲ್ಲಿ ಪ್ರಚಾರಕ್ಕೆ ಹೆಚ್ಚಿನ ಆಸಕ್ತಿ ತೋರಿಸಲಿಲ್ಲ; ಬಾಗಲಕೋಟೆಯಲ್ಲಿ ತೋರಿಸಿದ ಮಟ್ಟದ ಉತ್ಸಾಹ ದಾವಣಗೆರೆಯಲ್ಲಿ ಇರಲಿಲ್ಲ ಎಂದು ಹೇಳಲಾಗಿತ್ತು.

ಮುಖ್ಯಮಂತ್ರಿ ಪಾಳೆಯದ ಅಭಿಪ್ರಾಯದಲ್ಲಿ, ಬಾಗಲಕೋಟೆಯಲ್ಲಿ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅಲ್ಪ ಅಂತರದಿಂದ ಗೆಲ್ಲುವ ಸಾಧ್ಯತೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಮತದಾನವಾಗಿದ್ದು, ಪಕ್ಷಕ್ಕೆ ಬಲವಾದ ನೆಲೆ ಇರುವುದರಿಂದ ಹಾಗೂ ಬಿಜೆಪಿ ಬಲವಾದ ನಗರ ಪ್ರದೇಶಗಳಲ್ಲಿ ಮತದಾನ ಕಡಿಮೆಯಾಗಿರುವುದರಿಂದ ಇದು ಪಕ್ಷಕ್ಕೆ ಅನುಕೂಲಕರವಾಗಬಹುದು.

ರಾಜಕೀಯ ವಿಶ್ಲೇಷಕರ ಪ್ರಕಾರ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಉಳಿಸಿಕೊಳ್ಳಲು ವಿಫಲವಾದರೆ ಅಥವಾ ಒಂದನ್ನಾದರೂ ಕಳೆದುಕೊಂಡರೆ, ಅದು ಕರ್ನಾಟಕದಲ್ಲಿ ಪಕ್ಷಕ್ಕೆ ಇನ್ನಷ್ಟು ತೊಂದರೆ ಉಂಟುಮಾಡಬಹುದು. ಇದರಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ನಡುವಿನ ಭಿನ್ನಾಭಿಪ್ರಾಯಗಳು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT