ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದ್ದ ಜಮೀರ್ ಅಹ್ಮದ್ ಖಾನ್ ಅವರು ಜೆಡಿಎಸ್ ಸೇರುತ್ತಾರೆ ಎಂಬ ವದಂತಿಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಜೆಡಿಎಸ್ಗೆ ಮರಳಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದವು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿಯವರು, ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಾನು ತಾನೇ ನಿರ್ಧಾರ ಕೈಗೊಳ್ಳಬೇಕು. ನನ್ನ ಸಂಪರ್ಕಕ್ಕೇ ಯಾರೂ ಬಂದಿಲ್ಲ ಎಂದ ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇಕೆ ಬರುತ್ತದೆ ಎಂದು ಹೇಳಿದರು.
ನನಗೂ ನೀವು ಹೇಳಿದ ವ್ಯಕ್ತಿಗೂ ಸಂಪರ್ಕ ಇಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ. ನಾವು ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ. ಇನ್ನೊಂದು ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟುಗಳನ್ನು ಲಾಭ ಮಾಡಿಕೊಳ್ಳುವ ಮನಸ್ಥಿತಿ ನಮ್ಮದಲ್ಲ ಎಂದು ಸ್ಪಷ್ಟಪಡಿಸಿದರು.
ಜಮೀರ್ ಅಹ್ಮದ್ ಖಾನ್ ಅವರು ಹಿಂದೆ ಜೆಡಿಎಸ್ನಲ್ಲಿ ಇದ್ದು ನಂತರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಆ ಹಿನ್ನೆಲೆ ಅವರ ಮರಳುವಿಕೆ ಬಗ್ಗೆ ಊಹಾಪೋಹಗಳು ಹೆಚ್ಚಾಗಿದ್ದವು. ಆದರೆ, ಈಗ ಕುಮಾರಸ್ವಾಮಿ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.