ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಭಯೋತ್ಪಾದಕ' ಎಂದು ಕರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ, ಕರ್ನಾಟಕ ಬಿಜೆಪಿ ಗುರುವಾರ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿತು ಮತ್ತು ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆ ಮತ್ತು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಪಕ್ಷದ ಹಲವಾರು ಶಾಸಕರು ಹಾಗೂ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಬಿಜೆಪಿ ನಾಯಕರು ಫಲಕಗಳನ್ನು ಹಿಡಿದು ಖರ್ಗೆ ವಿರುದ್ಧ ಘೋಷಣೆಗಳನ್ನು ಕೂಗಿದರು.
"ನಮ್ಮ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ದೇಶಗಳು ತಮ್ಮ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಭಾರತದ ಬೇರೆ ಯಾವುದೇ ಪ್ರಧಾನಿ ಇಷ್ಟೊಂದು ಪ್ರಮಾಣದಲ್ಲಿ ಪ್ರಶಸ್ತಿಗಳನ್ನು ಪಡೆದಿಲ್ಲ. ಇಡೀ ಜಗತ್ತು ನರೇಂದ್ರ ಮೋದಿಯವರ ನಾಯಕತ್ವವನ್ನು ಗುರುತಿಸಿರುವ ಸಮಯದಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಬಿಜೆಪಿ ಮಾತ್ರವಲ್ಲ, ಇಡೀ ದೇಶವೇ ಇದನ್ನು ಖಂಡಿಸುತ್ತದೆ" ಎಂದು ವಿಜಯೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಖರ್ಗೆ ಮತ್ತು ಕಾಂಗ್ರೆಸ್ ಪಕ್ಷವು ನರೇಂದ್ರ ಮೋದಿಯವರ ಜನಪ್ರಿಯತೆಯನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದರು.
"ಹಿಂದುಳಿದ ವರ್ಗದಿಂದ ಬಂದಿರುವ ನರೇಂದ್ರ ಮೋದಿ ಸತತ ಹನ್ನೆರಡು ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಕಾಂಗ್ರೆಸ್ ಗೆ ಇದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೇಶಾದ್ಯಂತ ಪಕ್ಷ ದಿನೇ ದಿನೇ ಕುಸಿಯುತ್ತಿದೆ, ಆದ್ದರಿಂದ ಅವರು ಮೋದಿ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಮತ್ತು ಖರ್ಗೆ ಅವರು ದೇಶದ ಕ್ಷಮೆಯಾಚಿಸಬೇಕು" ಎಂದು ಆಗ್ರಹಿಸಿದರು.
ಎಐಸಿಸಿ ಅಧ್ಯಕ್ಷರ ಹೇಳಿಕೆಯು ಕಾಂಗ್ರೆಸ್ ಪಕ್ಷದ "ಅವನತಿ ಸಂಸ್ಕೃತಿಯನ್ನು" ಪ್ರತಿಬಿಂಬಿಸುತ್ತದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.