ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕರೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿಯನ್ನು ಮುಂದುವರೆದಿದ್ದು, ಅಧ್ಯಕ್ಷ ಸ್ಥಾನದಿಂದ ಕೂಡಲೇ ವಜಾಗೊಳಿಸುವಂತೆ ಕಾಂಗ್ರೆಸ್'ಗೆ ಆಗ್ರಹಿಸಿದೆ.
ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಪ್ರಧಾನಿ ಮೋದಿ ಅವರನ್ನು “ಭಯೋತ್ಪಾದಕ” ಎಂದು ಕರೆದಿರುವ ಖರ್ಗೆ ಅವರ ಹೇಳಿಕೆ ಅತ್ಯಂತ ಅವಮಾನಕರ ಎಂದು ಹೇಳಿದ್ದಾರೆ. ಈ ಹಿನ್ನೆಲೆ ಖರ್ಗೆ ಅವರು ಕೂಡಲೇ ದೇಶದ ಜನತೆಗೆ ಕ್ಷಮೆಯಾಚಿಸಬೇಕು ಹಾಗೂ ಕಾಂಗ್ರೆಸ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಖರ್ಗೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಲು ಬಿಜೆಪಿ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳು ವಿಧಾನಸೌಧ ಆವರಣದಲ್ಲಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಖರ್ಗೆ ಅವರ ಈ ಹೇಳಿಕೆ ಕಾಂಗ್ರೆಸ್ ನಾಯಕರ ನಿರಾಶೆಯನ್ನು ತೋರಿಸುತ್ತವೆ, “ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಭಯದಿಂದ ಇಂತಹ ಭಾಷೆ ಬಳಸುತ್ತಿದ್ದಾರೆಂದು ಟೀಕಿಸಿದರು.
ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಕೂಡ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ಹೇಳಿಕೆ ಅತ್ಯಂತ ಅವಮಾನಕರವಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಮಣಿ ಶಂಕರ್ ಅಯ್ಯರ್ ಅವರೊಂದಿಗೆ ಖರ್ಗೆ ಗೌಪ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.