ಬೆಂಗಳೂರು: ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಅಹ್ಮದ್ ಜೆಡಿಎಸ್ಗೆ ಬರುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಬರುತ್ತಾರೆಂದು ಜೆಡಿಎಸ್ ಪಕ್ಷ ಉಳಿದಿಲ್ಲ. ಮುಂದೆಯೂ ಅಂತಹ ಸನ್ನಿವೇಶ ಸೃಷ್ಟಿಯಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಜೆಡಿಎಸ್ ಸೇರ್ಪಡೆಯಾಗುವ ಕುರಿತ ವದಂತಿ ಬಗ್ಗೆ ಉತ್ತರಿಸಿದ ಅವರು, ಈ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರೇ ಸ್ಟಷ್ಟೀಕರಣ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಥಾನಮಾನ ಕೊಟ್ಟು ಬೆಳೆಸಿದೆ ಎಂದು ಹೇಳಿದ್ದಾರೆ. ಹೀಗಾಗಿ ಅವರ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.
ನಮ್ಮ ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ. ನಾವು ಹೋರಾಡಲು ಸಿದ್ಧರಿದ್ದೇವೆ. ಯಾರೋ ಪಕ್ಷಕ್ಕೆ ಬರುತ್ತಾರೆ ಎಂದು ನೆಚ್ಚಿಕೊಂಡು ಪಕ್ಷ ಉಳಿದಿಲ್ಲ. ಇನ್ನು ಮುಂದೆಯೂ ಅದು ಆಗಲ್ಲ. ಪಕ್ಷದಲ್ಲಿ ಅಂತಹ ಸನ್ನಿವೇಶ ಸೃಷ್ಟಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಬಗ್ಗೆ ಬಿಜೆಪಿ ಕೇಂದ್ರದ ನಾಯಕರು ಶೀಘ್ರದಲ್ಲೇ ಉತ್ತರ ನೀಡಲಿದ್ದಾರೆ. ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಸೇರಿ ಮೂರು ಕ್ಷೇತ್ರಗಳಿಗೆ ಮಿತ್ರ ಪಕ್ಷ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.
ಈಗಾಗಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿ, ಗೃಹ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಆಗ್ನೇಯ ಪದವೀಧರ ಕ್ಷೇತ್ರದ ವಾಸ್ತವಾಂಶದ ಬಗ್ಗೆ ಚರ್ಚಿಸಿದ್ದಾರೆ. ಇದಕ್ಕೆ ಅತಿ ಶೀಘ್ರದಲ್ಲೇ ಉತ್ತರ ಸಿಗಲಿದೆ ಎಂದು ಜೆಡಿಎಸ್ ಕಾರ್ಯಕರ್ತರು ಕಾಯುತ್ತಿದ್ದೇವೆ ಎಂದು ಹೇಳಿದರು..