ತುಮಕೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆಗಳು ನಡೆಯಲಿವೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ನಡೆಗಳು ಸರ್ಕಾರವನ್ನು ಪತನದ ಅಂಚಿಗೆ ತಳ್ಳುತ್ತಿವೆ ಎಂದು ಆರೋಪಿಸಿದರು.
ಸಿಎಂ ರೇಸ್ನಲ್ಲಿ ಕೈ ನಾಯಕರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಅವರು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಮುಖ್ಯಮಂತ್ರಿಯಾಗಲು ತಯಾರಿ ನಡೆಸಿದ್ದಾರೆ. ಮೇ 10ರಂದು ಮುಹೂರ್ತ ಕೂಡ ನಿಗದಿಯಾಗಿದೆ ಎಂಬ ಸ್ಫೋಟಕ ಮಾಹಿತಿಯನ್ನು ಗೌಡರು ಹಂಚಿಕೊಂಡಿದ್ದಾರೆ.
ರಾಜ್ಯ ಸರ್ಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಕೇವಲ ಕುರ್ಚಿ ಉಳಿಸಿಕೊಳ್ಳುವ ಆಟ ನಡೆಯುತ್ತಿದೆ. ಕಾಂಗ್ರೆಸ್ ಒಳಜಗಳದಿಂದಾಗಿ ರಾಜ್ಯದ ಆಡಳಿತ ಯಂತ್ರ ಕುಸಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.