ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳು ಮೇ 4 ರಂದು ಹೊರಬಂದ ನಂತರ ನಾಯಕತ್ವದಲ್ಲಿ ಬದಲಾವಣೆಯಾಗಬಹುದು ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸಂಪುಟ ಪುನಾರಚನೆಗೆ ಅವಕಾಶ ನೀಡಲಾಗುವುದು ಎಂಬ ಊಹಾಪೋಹಗಳ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ನಾಯಕರು ನಗರದಲ್ಲಿ ಗೌಪ್ಯ ಸಭೆ ನಡೆಸಿದ್ದು, ಇದು ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಿವಾಸದಲ್ಲಿ ನಡೆದ ಈ ಸಭೆ, ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ.
ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಹೋದರ ಡಿ.ಕೆ. ಸುರೇಶ್ ಜೊತೆಗೂಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೀರ್ಘ ಕಾಲ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ, 2023ರಲ್ಲಿ ಸರ್ಕಾರ ರಚನೆಯಾಗುವಾಗ ಮಾಡಿಕೊಂಡಿದ್ದ ಅಧಿಕಾರ ಹಂಚಿಕೆ ಒಪ್ಪಂದವನ್ನು ನೆನಪಿಸಿ, ಸಿಎಂ ಸ್ಥಾನ ಹಸ್ತಾಂತರವಾಗಬೇಕು ಎಂಬ ವಿಷಯವನ್ನು ಅವರು ಒತ್ತಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನೂ ಸಂಪರ್ಕಿಸಲು ಅವರು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಇದೇ ವಿಷಯವಾಗಿ ಕೆ.ಸಿ. ವೇಣುಗೋಪಾಲ್ ಅವರ ಜೊತೆಯೂ ದೂರವಾಣಿ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.
ಈ ನಡುವೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಒಪ್ಪಂದವಾಗಿದೆ ಎಂದು ಅವರ ಸೋದರ ಮಾವ ಮತ್ತು ಕುಣಿಗಲ್ ಶಾಸಕ ಡಾ. ಎಚ್.ಡಿ. ರಂಗನಾಥ್ ಶನಿವಾರ ತುಮಕೂರಿನಲ್ಲಿ ಹೇಳಿದ್ದಾರೆ.
ಹೈಕಮಾಂಡ್ನಿಂದ ಸಂದೇಶಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಹೈಕಮಾಂಡ್ ನಿವಾರಿಸಬೇಕು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಒತ್ತಾಯಿಸಿದ್ದಾರೆ.
ಆದರೆ, ಸಿದ್ದರಾಮಯ್ಯ ಬಣದ ನಾಯಕರು ಹೈಕಮಾಂಡ್ ಸಂಪುಟ ಪುನರಾಚನೆಗೆ ಒಪ್ಪಿಗೆ ನೀಡುತ್ತದೆ ಎಂದು ಬಲವಾಗಿ ನಂಬಿದ್ದು, ರಾಹುಲ್ ಕೇಳಿದರೆ ಮಾತ್ರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆಂದು ಹೇಳಿದೆ.
ಇದರ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸತೀಶ್ ಜಾರಕಿಹೊಳಿ ಅವರಿಗೆ ಕೊಡಿಸಲು ಲಾಬಿಯೂ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ದಲಿತ ನಾಯಕರು, ವಿಶೇಷವಾಗಿ ಜಿ.ಪರಮೇಶ್ವರ್ ಅವರನ್ನು ಪರ್ಯಾಯವಾಗಿ ಪರಿಗಣಿಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.
ಇದಲ್ಲದೆ, ಶಿವಕುಮಾರ್ ಸಿಎಂ ಆಗುವುದಕ್ಕೆ ಸಂಬಂಧಿಸಿದ ಕಾನೂನು ಅಡೆತಡೆಗಳ ಕುರಿತು ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ನಾಯಕರು ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಜೊತೆ ಚರ್ಚೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಶಿವಕುಮಾರ್ ಆಪ್ತನಾದ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮನೆ ಮೇಲೆ ಇಡಿ ದಾಳಿ ನಡೆದ ವಿಚಾರವೂ ಚರ್ಚೆಗೆ ಬಂದಿದೆ.
ರಾಜಕೀಯ ಚಟುವಟಿಕೆಗಳ ಜೊತೆಗೆ, ತಮ್ಮ ವೈಯಕ್ತಿಕ ಮತ್ತು ಕಾನೂನು ಸಮಸ್ಯೆಗಳ ಪರಿಹಾರಕ್ಕಾಗಿ ಸಹೋದರರು ಕಾನೂನು ತಜ್ಞರ ಜೊತೆ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಒಟ್ಟಿನಲ್ಲಿ, ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಕೇವಲ ರಾಜಕೀಯ ಭೇಟಿಯಲ್ಲ, ಸಿಎಂ ಹುದ್ದೆ ಕುರಿತ ಗಂಭೀರ ಚರ್ಚೆಗಳ ಭಾಗವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕುತೂಹಲಗಳನ್ನು ಮೂಡಿಸಿದೆ.