ಕಲಬುರಗಿ: ರಾಜ್ಯದಲ್ಲಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಧ್ಯೆ ಕುರ್ಚಿ ಕದನ ನಡೆಯುತ್ತಿದೆ, ನಾಯಕತ್ವಕ್ಕಾಗಿ ಭಿನ್ನಾಭಿಪ್ರಾಯಗಳಿವೆ, ಡಿ ಕೆ ಶಿವಕುಮಾರ್ ಅವರನ್ನು ಕೂಡಲೇ ಉಪ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕೆಂದು ಆರ್ಯ ಈಡಿಗ ಕೇಂದ್ರ ಸಮಿತಿ ಮುಖ್ಯಸ್ಥ ಪ್ರಣವಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನಿನ್ನೆ ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ, ಯುಗಾದಿ, ಪಂಚರಾಜ್ಯ ಚುನಾವಣೆ ಎಲ್ಲ ಮುಗಿದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಿದೆ. ಸಾಧ್ಯವಾದಷ್ಟು ಬೇಗ ಸರ್ಕಾರ ಮೇ 10ರೊಳಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.
ಈಗಾಗಲೇ ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲು ಬಹಳ ವಿಳಂಬ ಮಾಡಿದೆ, ಇನ್ನಾದರೂ ವಿಳಂಬ ಮಾಡದೆ ಕೂಡಲೇ ತೀರ್ಮಾನ ಕೈಗೊಳ್ಳಲಿ. ಡಿ ಕೆ ಶಿವಕುಮಾರ್ ಅವರು ಕೂಡ ಸಿದ್ದರಾಮಯ್ಯನವರಂತೆ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹಲವು ಕೆಲಸಗಳನ್ನು ಮಾಡಿದ್ದಾರೆ. ಡಿ ಕೆ ಶಿವಕುಮಾರ್ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತ. ಅವರು ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಸಮರ್ಪಿಸಿಕೊಂಡಿದ್ದಾರೆ ಎಂದರು.
ಆರು ವರ್ಷಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರೂ ತೆಗೆದುಕೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಅಂತಹ ಸಂದರ್ಭದಲ್ಲಿ ಧೈರ್ಯವಾಗಿ ಡಿ ಕೆ ಶಿವಕುಮಾರ್ ಮುಂದೆ ಬಂದು ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯಾದ್ಯಂತ ಕೆಲಸ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ತಂದರು. ಸಾಕಷ್ಟು ಕಿರುಕುಳ, ನೋವು ಅನುಭವಿಸಿ ಮುಖ್ಯವಾಗಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದರು. ಇದರಿಂದ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಪ್ರಣವಾನಂದ ಸ್ವಾಮೀಜಿ ಒತ್ತಾಯಿಸಿದರು.
ಮೇ 10ರೊಳಗೆ ಡಿ ಕೆ ಶಿವಕುಮಾರ್ ರಾಜ್ಯದ ಸಿಎಂ ಆಗಬಹುದು ಎಂಬ ಸುದ್ದಿಯಿದೆ, ಅದು ನಿಜವಾದರೆ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ ಎಂದರು.