ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣಪತ್ರ ನೀಡುವಲ್ಲಿ ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಅಡ್ಡಿಯುಂಟು ಮಾಡುತ್ತಿದೆ ಎಂದು ಬಿಜೆಪಿ ಎಂಎಲ್ಸಿ ಎನ್. ರವಿ ಕುಮಾರ್ ಅವರು ಮಂಗಳವಾರ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಳವಾರ ಸಮುದಾಯಕ್ಕೆ ಈಗಾಗಲೇ ಎಸ್ಟಿ ಹುದ್ದೆ ಮಾನ್ಯತೆ ನೀಡಲಾಗಿದ್ದರೂ, ಈ ಎರಡು ಜಿಲ್ಲೆಗಳ ಅರ್ಹ ಸದಸ್ಯರಿಗೆ ಇನ್ನೂ ಪ್ರಮಾಣಪತ್ರ ಸಿಗುತ್ತಿಲ್ಲ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಸಚಿವರೊಬ್ಬರ ಹೆಸರು ಉಲ್ಲೇಖಿಸಿ, ಅವರು ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ರವಿ ಕುಮಾರ್ ಆರೋಪಿಸಿದರು.
ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡಲೇಬೇಕು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುತ್ತಿಲ್ಲ. ತಕ್ಷಣ ಪ್ರಮಾಣಪತ್ರ ನೀಡದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಆಡಳಿತಾಧಿಕಾರಿಗಳೊಂದಿಗೆ ಮಾತನಾಡಿದಾಗ ಸುಮಾರು 28,000 ಎಸ್ಟಿ ಪ್ರಮಾಣಪತ್ರಗಳನ್ನು ಈಗಾಗಲೇ ನೀಡಲಾಗಿದೆ, ಅರ್ಹರಿಗೆ ಮಾತ್ರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಆದರೂ, ಈ ಎರಡು ಜಿಲ್ಲೆಗಳಲ್ಲಿ ನಿಜವಾದ ಅರ್ಹರು ಇನ್ನೂ ತಮ್ಮ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಇತ್ತೀಚಿನ ಪ್ರತಿಭಟನೆ ವೇಳೆ ಸಮುದಾಯದ ಸದಸ್ಯರ ವಿರುದ್ಧದ ದಾಖಲಾಗಿರುವ ಎಫ್ಐಆರ್ಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದೂ ಒತ್ತಾಯಿಸಿದರು.
ಪ್ರಮಾಣಪತ್ರಗಳ ಕೊರತೆಯಿಂದ ಸಮುದಾಯದ ಅನೇಕ ಯುವಕರು ಸರ್ಕಾರಿ ಉದ್ಯೋಗ ಮತ್ತು ಕಾಲೇಜು ಪ್ರವೇಶದ ಅವಕಾಶಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.