ಕಲಬುರಗಿ: ಅನುಭವ ಹೊಂದಿರುವ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದರು.
ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ಆಂತರಿಕ ರಾಜಕೀಯ ಮತ್ತು ಗೊಂದಲಗಳ ಮಧ್ಯೆ, ರಾಜ್ಯದ ಜನರಿಗೆ ನೀಡಿದ "ಉತ್ತಮ ಆಡಳಿತ"ದ ಭರವಸೆಯನ್ನು ಈಡೇರಿಸುವುದು ಮುಖ್ಯ ಎಂದು ಅವರು ಪ್ರತಿಪಾದಿಸಿದರು.
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳು ಮತ್ತು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳ ಜೊತೆಗೆ, ಮೇ 4 ರ ನಂತರ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ರಚನೆ ಕುರಿತು ಸಂಭಾವ್ಯ ನಿರ್ಧಾರದ ಬಗ್ಗೆ ಪಕ್ಷ ಮತ್ತು ರಾಜಕೀಯ ವಲಯಗಳಲ್ಲಿ ಹರಿದಾಡುತ್ತಿರುವ ಊಹಾಪೋಹಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ.
"ಅವರು (ಖರ್ಗೆ) ಮುಖ್ಯಮಂತ್ರಿಯಾದರೆ ನಾವು ತುಂಬಾ ಸಂತೋಷಪಡುತ್ತೇವೆ, ಏಕೆಂದರೆ ಅವರು ಸಾಕಷ್ಟು ಅನುಭವ ಹೊಂದಿರುವ ಹಿರಿಯ ರಾಜಕಾರಣಿ. ಅವರು ಮುಖ್ಯಮಂತ್ರಿಯಾದರೆ, ನಾವೆಲ್ಲರೂ ಅದನ್ನು ಸ್ವಾಗತಿಸುತ್ತೇವೆ" ಎಂದು ಖರ್ಗೆ ಸ್ವತಃ ಮುಖ್ಯಮಂತ್ರಿಯಾಗುವ ಬಯಕೆಯನ್ನು ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು.
ಇದೇ ವೇಳೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ಗೆ ಮಾಹಿತಿ ಇದೆ. ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುತ್ತದೆ ಮತ್ತು ಅದನ್ನು ಎಲ್ಲರೂ ಪಾಲಿಸಬೇಕಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು ಪದೇ ಪದೇ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಅಭಿವೃದ್ಧಿ ಕೆಲಸಗಳು ಹಾಗೂ ಇಲಾಖೆಗಳಿಗಾಗಿ ಅನುದಾನ ಕೇಳಲು ಕೇಂದ್ರ ಸಚಿವರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಸಚಿವರು ದೆಹಲಿಗೆ ಹೋಗುವುದು ಸಹಜ ಎಂದು ಹೇಳಿದರು.
ಪಕ್ಷದ ಹೈಕಮಾಂಡ್ನ್ನು ನಮ್ಮ ನಾಯಕರು ದೇವಾಲಯದಂತೆ ಕಾಣುವ ಕಾರಣ, ದೆಹಲಿ ಭೇಟಿ ವೇಳೆ ಹೈಕಮಾಂಡ್'ನ್ನೂ ಭೇಟಿ ಮಾಡುತ್ತಾರೆ. ಅದರಲ್ಲೇನೂ ವಿಶೇಷವಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಬಗ್ಗೆ ಮಾತನಾಡಿ, ಅದು ದಲಿತರು ಸೇರಿದಂತೆ ಜನರ ಬಯಕೆಯಾಗಿದ್ದು, ಈ ಕುರಿತು ಯಾವುದೇ ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ದಲಿತ ಸಚಿವರು ಪದೇಪದೇ ಡಿನ್ನರ್ ಮೀಟಿಂಗ್ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಹೌದು, ನಾವು ಭೇಟಿ ಆಗುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ದಾರೆ. ಅದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.
ಭೋಜನಕೂಟದ ವೇಳೆ ರಾಜಕೀಯ ಸೇರಿ ಹಲವು ವಿಷಯಗಳನ್ನು ಚರ್ಚಿಸುವುದು ಸಹಜ. ಅದರಲ್ಲಿ ಯಾವುದೇ ತಪ್ಪಿಲ್ಲ. ಸಮುದಾಯದ ಯಾವುದೇ ನಾಯಕನನ್ನು ಮುಖ್ಯಮಂತ್ರಿ ಮಾಡಿ ಎಂದು ನಾವು ಹೈಕಮಾಂಡ್ಗೆ ಕೇಳಿಲ್ಲ. ಅಂತಿಮ ತೀರ್ಮಾನ ಕಾಂಗ್ರೆಸ್ ಹೈಕಮಾಂಡ್ನದ್ದೇ ಎಂದು ತಿಳಿಸಿದರು.