ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮಾಜಿ ಸಚಿವ ಎಂಸಿ ಸುಧಾಕರ್ ಅವರು ಸಿಎಂ ಡಿಕೆ ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಸಿಎಂ ಹೆಸರನ್ನು ನೇರವಾಗಿ ಉಲ್ಲೇಖಿಸದೇ “ಸರ್ಕಾರದ ಮುಖ್ಯಸ್ಥರು” ಎಂದು ವಾಗ್ದಾಳಿ ನಡೆಸಿದ ಅವರು, ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿಯನ್ನು ಮೆಚ್ಚಿ ನಾನು ಅವರಿಗೆ ಆತ್ಮೀಯನಾದೆ. ನಾನು ಜಾತಿ ನೋಡಿ ನಾಯಕತ್ವ ಮೆಚ್ಚಿಕೊಂಡವನಲ್ಲ. ಆದರೆ ಸಿದ್ದರಾಮಯ್ಯ ಅವರ ಆಪ್ತ ಎನ್ನುವ ಒಂದೇ ಕಾರಣಕ್ಕೆ ವೈಯಕ್ತಿಕ ದ್ವೇಷ ಸಾಧಿಸಿ ನನಗೆ ಸಚಿವ ಸ್ಥಾನ ಕೈತಪ್ಪುವಂತೆ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಹಲವರಿಗೆ ಅವಕಾಶ ಸಿಕ್ಕಿದೆ, ಆದರೆ ಯಾವ ಮಾನದಂಡದ ಮೇಲೆ ಸಚಿವ ಸ್ಥಾನ ನೀಡಲಾಗಿದೆ ಎಂಬುದು ತಿಳಿಯುತ್ತಿಲ್ಲ ಎಂದು ಸುಧಾಕರ ಹೇಳಿದ್ದಾರೆ.
ಸಿಎಂ ಆಶಯದಂತೆ ನಾನು ನಡೆದುಕೊಳ್ಳದ ಕಾರಣಕ್ಕೆ ಈ ರೀತಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಸಮಾಧಾನ ಹೊರಹಾಕಿದ ಅವರು, “ಕೆಲವರ ನಡವಳಿಕೆ ಹಾಗೂ ಮಾತು ನನಗೆ ಇಷ್ಟವಿಲ್ಲ, ಬಹುಶಃ ನನ್ನ ಕಾರ್ಯವೈಖರಿ ಅವರ ನಿರೀಕ್ಷೆಯ ಮಟ್ಟದಲ್ಲಿ ಇರಲಿಲ್ಲವೇನೋ” ಎಂದಿದ್ದಾರೆ.
ನಿನ್ನೆ ನಡೆದ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಅವರ ಮಾತಿಗೆ ಯಾವುದೇ ಮನ್ನಣೆ ಸಿಕ್ಕಿಲ್ಲ. ಅವರ ತ್ಯಾಗಕ್ಕೆ ಯಾವುದೇ ಬೆಲೆ ಇಲ್ಲದಂತಾಗಿದೆ. ಮುಂಬರುವ ದಿನಗಳಲ್ಲಿ ಸಿದ್ದರಾಮಯ್ಯ ಅವರನ್ನು ಪಕ್ಷ ಹೇಗೆ ನಡೆಸಿಕೊಳ್ಳುತ್ತದೆ ಮತ್ತು ಅವರಿಗೆ ಯಾವ ಸ್ಥಿತಿ ಬರುತ್ತದೆ ಎಂಬುದನ್ನು ಕಾದು ನೋಡಿ. ಈ ಸಣ್ಣ ಸಂಪುಟ ಮಾಡಲು ಎರಡು ತಿಂಗಳು ಬೇಕಿತ್ತಾ? ಹೈಕಮಾಂಡ್ ನಾಯಕರು ಈ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಿದರು.