ಬೆಂಗಳೂರು: ಬಿಡೆದಿ ಟೌನ್ಶಿಪ್ ಯೋಜನೆಗೆ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ರೈತ ವಿರೋಧಿ ಯೋಜನೆಯಾಗಿದ್ದು ರಿಯಲ್ ಎಸ್ಟೇಟ್ ಮಾಫಿಯಾಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯೋಜನೆಗೆ ಸರ್ಕಾರ ಮುಂದಾಗಿದೆ ಎಂದು ಹೇಳಿದೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಬಿಡದಿ ಟೌನ್ಶಿಪ್ ಯೋಜನೆಗೆ ಈಗಾಗಲೇ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರೂ ಸರ್ಕಾರ ಯೋಜನೆಯನ್ನು ಮುಂದುವರಿಸುತ್ತಿದೆ. ಇದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಮಂಡಲದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸಲಿವೆ ಎಂದು ಹೇಳಿದರು.
ರೈತರ ಹಿತಾಸಕ್ತಿಗೆ ವಿರುದ್ಧವಾಗಿರುವ ಈ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ, ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ನಡೆಸಲಿವೆ. ಈ ಕುರಿತು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಶನಿವಾರ ನಡೆಯಲಿರುವ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಹೋರಾಟದ ರೂಪುರೇಷೆ ಅಂತಿಮಗೊಳಿಸಲಾಗುತ್ತದೆ" ಎಂದು ತಿಳಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಅವರು, "ಸರ್ಕಾರದಲ್ಲಿ ಪ್ರತಿಯೊಂದು ಕಾಮಗಾರಿಗೂ ಕಮಿಷನ್ ನಿಗದಿಯಾಗಿದೆ. ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲ ಕಾಮಗಾರಿಗಳಲ್ಲಿ ಪ್ರತಿ ಚದರ ಅಡಿಗೂ ಕನಿಷ್ಠ 100 ರೂಪಾಯಿ ಕಮಿಷನ್ ವಸೂಲಿ ಮಾಡಲಾಗುತ್ತಿದೆ" ಎಂದು ದೂರಿದರು.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಅಕ್ರಮಗಳ ವಿಚಾರವನ್ನೂ ಪ್ರಸ್ತಾಪಿಸಿದ ಅವರು, "ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಕೆಪಿಎಸ್ಸಿಯಲ್ಲಿನ ಅಕ್ರಮಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದರು. ಈಗ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲೂ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕಾಂಗ್ರೆಸ್ ನಾಯಕರ ಕುಟುಂಬ ಸದಸ್ಯರೇ ಈ ಹುದ್ದೆಗಳನ್ನು ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಹಣ ಪಾವತಿಸಿದವರಿಗೆ ಅವಕಾಶ ದೊರೆತಿದೆ ಎನ್ನುವ ಆರೋಪಗಳಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೊ ಕೂಡ ಹೊರಬಂದಿದೆ" ಎಂದು ಹೇಳಿದರು.
ಇದೇ ವೇಳೆ ಹೊಸ ಸಚಿವ ಸಂಪುಟವನ್ನು "ಪೇಮೆಂಟ್ ಕ್ಯಾಬಿನೆಟ್" ಎಂದು ಟೀಕಿಸಿದ ಅಶೋಕ್, "ಅಕ್ರಮ ಎಸಗಿದ ಆರೋಪ ಎದುರಿಸುತ್ತಿದ್ದವರೇ ಮತ್ತೆ ಸಚಿವರಾಗಿದ್ದಾರೆ. ಮಾಜಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಆಡಿಯೊ ಕೂಡ ಬಹಿರಂಗವಾಗಿದೆ. ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಹಾಗೂ ನಂತರ ಹಿಂಪಡೆಯುವ ರಾಜಕೀಯ ನಾಟಕ ನಡೆಯುತ್ತಿದೆ" ಎಂದು ವ್ಯಂಗ್ಯವಾಡಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸೂರ್ಜೇವಾಲಾ ಅಸಮಾಧಾನಿತ ಶಾಸಕರ ಮನೆಗಳಿಗೆ ತೆರಳಿ ಸಮಾಧಾನಪಡಿಸುವ ಪ್ರಯತ್ನ ನಡೆಸುತ್ತಿದ್ದಾರೆ, "ಹಣ ಕೊಟ್ಟು ಸಚಿವರಾದವರು ಆ ಹಣವನ್ನು ಜನರಿಂದಲೇ ವಸೂಲಿ ಮಾಡುತ್ತಾರೆ. ಈಗಿರುವ ಶೇ.60ರಷ್ಟು ಕಮಿಷನ್ ದರ ಮುಂದಿನ ದಿನಗಳಲ್ಲಿ ಶೇ.80ಕ್ಕೆ ಏರಲಿದೆ" ಎಂದು ವಾಗ್ದಾಳಿ ನಡೆಸಿದರು.