ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನ ಮತ್ತಷ್ಟು ಭುಗಿಲೆದ್ದಿದೆ. ವಿಜಯನಗರ ಶಾಸಕ ಎಂ. ಕೃಷ್ಣಪ್ಪ ತಮಗೆ ಮಂತ್ರಿಗಿರಿ ಕೊಡಲೇಬೇಕು ಎಂದು ಪಟ್ಟುಹಿಡಿದಿದ್ದಾರೆ.
ಕೃಷ್ಣಪ್ಪ ಅವರನ್ನು ಸಮಾಧಾನ ಪಡಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕೃಷ್ಣಪ್ಪರನ್ನು ಸಮಾಧಾನಪಡಿಸಲು ಹಲವು ಹುದ್ದೆಗಳನ್ನು ಆಫರ್ ಮಾಡಿದ್ದರೂ, ಅವರು ಯಾವುದನ್ನೂ ಸ್ವೀಕರಿಸದೆ ಸಚಿವ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದು ಪಕ್ಷಕ್ಕೆ ಡ್ಯಾಮೇಜ್ ಆಗುವ ಸಾಧ್ಯತೆ ಇದೆ.
ಎಂ. ಕೃಷ್ಣಪ್ಪ ಅವರ ಪುತ್ರ ಪ್ರಿಯಾಕೃಷ್ಣ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ, ಇದರ ಜೊತೆಗೆ ಬಿಡಿಎ ಅಧ್ಯಕ್ಷ ಹುದ್ದೆ, ನಿಗಮ ಅಥವಾ ಮಂಡಳಿ ಅಧ್ಯಕ್ಷ ಹುದ್ದೆಗಳನ್ನು ಆಫರ್ ಮಾಡಲಾಗಿದೆ. ಆದರೆ ಅವರು ಯಾವುದಕ್ಕೂ ಒಪ್ಪುತ್ತಿಲ್ಲ. ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.
ಯಾವುದೇ ಕಾರಣಕ್ಕೂ ಸಮಾಧಾನ ಆಗುವ ಪ್ರಶ್ನೆಯೇ ಇಲ್ಲ, ಸಚಿವ ಸ್ಥಾನ ಕೊಡಲೇ ಬೇಕು. ಮಿಸ್ಟೇಕ್ ಆಗಿದೆ ಎಂದಿದ್ದಾರೆ, ಸರಿಪಡಿಸುತ್ತೇವೆ ಎಂದಿದ್ದಾರೆ. ಹೇಗೆ ಸರಿಪಡಿಸುತ್ತಾರೆ ಗೊತ್ತಿಲ್ಲ, ಸಚಿವ ಸ್ಥಾನ ಕೊಡಲೇಬೇಕು ಎಂದು ಕಿಡಿಕಾರಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ ವಿಚಾರದಲ್ಲಿ ಬೇರೆ ಯಾವುದೇ ಚರ್ಚೆಗೆ ಆಸ್ಪದವಿಲ್ಲ. ನನಗೆ ಸಚಿವ ಸ್ಥಾನ ನೀಡಲೇಬೇಕು, ಕೂಡಲೇ ನೀಡಬೇಕು. ಅದನ್ನು ಬಿಟ್ಟು ಬೇರೆ ಯಾವ ಮಾತುಕತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಯಕರು ಮನೆಗೆ ಬಂದು ಹೋಗುತ್ತಿರುತ್ತಾರೆ, ಅವರೆಲ್ಲರೂ ನಮ್ಮ ಸ್ನೇಹಿತರು. ತಪ್ಪಿದೆ ಎನ್ನುವುದಕ್ಕಿಂತ ನನಗೆ ಸಚಿವ ಸ್ಥಾನ ನೀಡಬೇಕಿತ್ತು ಮತ್ತು ಅದನ್ನು ತಕ್ಷಣ ಕೊಡಬೇಕು ಅಷ್ಟೇ ಎಂದು ತಮ್ಮ ಖಡಕ್ ನಿಲುವನ್ನು ವ್ಯಕ್ತಪಡಿಸಿದ್ದಾರೆ.