ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಹಾಗೂ ರಾಷ್ಟ್ರ ಭಕ್ತರ ಬಳಗದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಮತ್ತೆ ಬಿಜೆಪಿಗೆ ಮರಳುವ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ತಾಯಿ ಪಕ್ಷವಾಗಿದ್ದು, ಮತ್ತೆ ಪಕ್ಷದೊಳಗೆ ಸೇರ್ಪಡೆಯಾಗುವ ಕುರಿತು ಮಾತುಕತೆಗಳು ನಡೆಯುತ್ತಿವೆ ಎಂದು ಹೇಳಿದರು.ಪಕ್ಷದೊಳಗಿನ ಗೊಂದಲಗಳು ಬಗೆಹರಿದರೆ ಮಾತ್ರ ಬಿಜೆಪಿಗೆ ಮರಳುವುದಾಗಿ ತಿಳಿಸಿದ್ದಾರೆ.
2024ರ ಏಪ್ರಿಲ್ 22ರಿಂದ ಬಿಜೆಪಿಯಿಂದ ದೂರ ಉಳಿದಿರುವ ಅವಧಿಯಲ್ಲಿ ತಾವು ಬೇರೆ ಯಾವುದೇ ಪಕ್ಷಕ್ಕೆ ಸೇರುವ ಬಗ್ಗೆ ಯೋಚಿಸಿಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ಮಾತುಕತೆಗಳು ನಡೆಯುತ್ತಿದ್ದು, ಪಕ್ಷದ ಮುಂದೆ ಕೆಲವು ಬೇಡಿಕೆಗಳನ್ನು ಇಟ್ಟಿರುವುದಾಗಿ ಹೇಳಿದರು. ಆದರೆ ಅವು ಯಾವುದೇ ಷರತ್ತುಗಳಲ್ಲ ಎಂದು ಸ್ಪಷ್ಟಪಡಿಸಿದರು.
ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಮರಳಲು ನಾನು ಸಿದ್ಧನಿದ್ದೇನೆ. ಆದರೆ, ಪಕ್ಷದ ಸಂಘಟನೆ ಮತ್ತು ಬಲವರ್ಧನೆಯ ಹಿತದೃಷ್ಟಿಯಿಂದ ಕೆಲವು ಬದಲಾವಣೆಗಳಾಗಬೇಕಿದೆ. ಇವುಗಳು ನಡೆದರೆ ಬಹಳ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಟೀಕಿಸಿದ ಈಶ್ವರಪ್ಪ, ಸರ್ಕಾರದ ಆಡಳಿತ ವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.