ವಿಜಯಪುರ: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ಶಿಪ್ ಯೋಜನೆಗಾಗಿ ರೈತರಿಂದ ಬಲವಂತವಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸರ್ಕಾರವೇ ಈ ವಿಚಾರವನ್ನು ಸ್ಪಷ್ಟಪಡಿಸಿರುವಾಗ ಯೋಜನೆಗೆ ತಮ್ಮ ಜಮೀನು ನೀಡಬೇಕೇ ಅಥವಾ ಬೇಡವೇ ಎಂಬುದು ರೈತರಿಗೆ ಬಿಟ್ಟ ವಿಚಾರ. ಆದರೂ ಬಿಜೆಪಿ ಮತ್ತು ಜೆಡಿಎಸ್ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ರೈತರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದರು.
ಬಿಡದಿ ಟೌನ್ಶಿಪ್ ಯೋಜನೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಚಾಲನೆ ನೀಡಲಾಗಿತ್ತು. ಇದೀಗ ಅದೇ ಪಕ್ಷ ಯೋಜನೆಯನ್ನು ವಿರೋಧಿಸುತ್ತಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅಸಮಾಧಾನ ವಿಚಾರಕ್ಕೆ ತಿರುಗೇಟು
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಶಿಫಾರಸು ಮಾಡಿದ ಶಾಸಕರಿಗೆ ಅವಕಾಶ ನೀಡದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಯತೀಂದ್ರ ತಳ್ಳಿಹಾಕಿದರು.
ಸಿದ್ದರಾಮಯ್ಯ ಅವರು ಎಂದಾದರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ? ಅಥವಾ ಪಕ್ಷ ತಮ್ಮನ್ನು ಕಡೆಗಣಿಸಿದೆ ಎಂದು ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದ ಅವರು, “ಸಂಪುಟ ವಿಸ್ತರಣೆಯಲ್ಲಿ ಶಾಸಕರನ್ನು ಸೇರ್ಪಡೆಗೊಳಿಸುವ ಮುನ್ನ ಹೈಕಮಾಂಡ್ ಸಿದ್ದರಾಮಯ್ಯ ಅವರ ಒಪ್ಪಿಗೆ ಪಡೆದಿದೆ,” ಎಂದರು.
ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದ ವಿಚಾರವಾಗಿ ಮಾತನಾಡಿದ ಯತೀಂದ್ರ, ಅಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಬಲಿಗರ ಶುಭಾಶಯ ಸ್ವೀಕರಿಸುವಲ್ಲಿ ಅವರು ನಿರತರಾಗಿದ್ದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸಚಿವ ಸ್ಥಾನ ಸಿಗದ ಕಾರಣ ಕೆಲವು ಶಾಸಕರು ಅಸಮಾಧಾನಗೊಳ್ಳುವುದು ಸಹಜ. ಆದರೆ, ಈ ವಿಚಾರವನ್ನು ಹೈಕಮಾಂಡ್ ಬಗೆಹರಿಸಲಿದೆ ಎಂದು ತಿಳಿಸಿದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಹೈಕಮಾಂಡ್ ನಿರ್ಧಾರ
ನೂತನ ಸಚಿವರಿಗೆ ಸೂಕ್ತ ಖಾತೆಗಳನ್ನು ನೀಡುವ ಬಗ್ಗೆಯೂ ನಾಯಕತ್ವವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಯತೀಂದ್ರ ಹೇಳಿದರು.
ಸಚಿವರು ನಿರ್ದಿಷ್ಟ ಖಾತೆ ಬೇಕೆಂದು ಕೇಳಬಹುದು. ಆದರೆ, ಅಂತಿಮವಾಗಿ ಯಾವ ಖಾತೆ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.
ಬಳಿಕ ಸಚಿವ ಸಂಪುಟದ ಪಟ್ಟಿಯಲ್ಲಿ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಅವರ ಹೆಸರು ಸೇರ್ಪಡೆಯಾಗಿರುವುದು ತಪ್ಪಾಗಿದೆ ಎಂದು ಯತೀಂದ್ರ ಒಪ್ಪಿಕೊಂಡರು.
ಈ ವಿಚಾರದಲ್ಲಿ ಪಕ್ಷ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದಲ್ಲಿ ಮಹಿಳಾ ಸಚಿವರು ಇರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಪಾಲಿಕೆ ಸದಸ್ಯರಿಗೆ ಅನುದಾನ ಕೊರತೆ ಆರೋಪ
ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕ ಅನುದಾನ ದೊರೆತಿಲ್ಲ ಎಂದು ಹಲವು ಪಾಲಿಕೆ ಸದಸ್ಯರು ಆರೋಪಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.