ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿವೆ. ಆದರೆ ಪ್ರತಿಪಕ್ಷಗಳ ಬೇಡಿಕೆಗೆ ಕೇರ್ ಮಾಡದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾಗೇಂದ್ರ ಅವರಿಗೆ ಹೊಸದಾಗಿ 'ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ'ದ ಜವಾಬ್ದಾರಿ ನೀಡಿದ್ದಾರೆ.
ಸಚಿವ ಬಿ ನಾಗೇಂದ್ರ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಖಾತೆ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಜವಾಬ್ದಾರಿಯನ್ನೂ ನೀಡಲಾಗಿದೆ.
ಹೌದು, ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಶ್ನೆಯಿಂದ ಈ ವಿಷಯ ಬೆಳಕಿಗೆ ಬಂದಿದ್ದು, ನಾಗೇಂದ್ರ ವಿರುದ್ಧ ಹಲವು ಗಂಭೀರ ಪ್ರಕರಣಗಳಿರುವುದಾಗಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ಶಶೀಲ್ ನಮೋಶಿ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ನಾಗೇಂದ್ರ ಅವರು, 2025 ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ರಚಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರೇ ಈ ಸಚಿವಾಲಯದ ಸಚಿವರೂ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ಘೋಷಣೆ ಮಾಡಿದ್ದರೂ ಈವರೆಗೂ ಯಾರಿಗೆ ಜವಾಬ್ದಾರಿ ನೀಡಲಾಗಿದೆ? ಏನೆಲ್ಲಾ ಕೆಲಸಗಳಾಗುತ್ತಿವೆ ಎಂದು ನಮೋಶಿ ಅವರು ಪ್ರಶ್ನೆ ಮಾಡಿದ್ದರು. ಸದ್ಯ ಇದಕ್ಕೆ ಉತ್ತರಿಸಿರುವ ಸರ್ಕಾರವು, ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರಿಗೆ ಅಂದರೆ, ಬಿ ನಾಗೇಂದ್ರ ಅವರಿಗೆ ಸಚಿವಾಲಯದ ಜವಾಬ್ದಾರಿ ನೀಡಲಾಗಿದೆ ಎಂದು ವಿವರಿಸಿದೆ.