ಕಲಬುರಗಿ: ಕೇಂದ್ರದ ಶಿಕ್ಷಣ ಇಲಾಖೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಲಾಬಿಯಾಗಿ ಮಾರ್ಪಟ್ಟಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಶನಿವಾರ ಕಲಬುರಗಿಯ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತಾದ ‘ಧೀಮಂತ ಧುರೀಣ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಶಿಕ್ಷಣ ಇಲಾಖೆಯಲ್ಲಿರುವ ಆರ್ಎಸ್ಎಸ್ನೊಂದಿಗೆ ನಂಟು ಹೊಂದಿರುವ ನಾಯಕರು ಯುವ ವಿದ್ಯಾರ್ಥಿಗಳನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಇತ್ತೀಚೆಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಧ್ವನಿಯಲ್ಲೂ ಬದಲಾವಣೆಯಾಗಿದ್ದು, ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳುತ್ತಿದ್ದಾರೆ.
ಬಡತನ ಹಾಗೂ ಸಂಕಷ್ಟದ ಪರಿಸ್ಥಿತಿಯಲ್ಲಿ ಬದುಕುತ್ತಿರುವವರಲ್ಲಿ ಹೆಚ್ಚಿನವರು ದಲಿತರಿದ್ದಾರೆ. “ಕಳೆದ 12 ವರ್ಷಗಳಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಿಜೆಪಿ ಮತ್ತು ಆರ್ಎಸ್ಎಸ್ ಏನು ಮಾಡಿದ್ದಾರೆ ಎಂಬುದನ್ನು ದೇಶಕ್ಕೆ ತಿಳಿಸಲಿ ಎಂದು ಸವಾಲು ಹಾಕಿದರು.
ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿದ ನಟ ಪ್ರಕಾಶ್ ರಾಜ್ ಮಾತನಾಡಿ, ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ವಂದೇ ಮಾತರಂ ವಿವಾದವನ್ನು ಮುನ್ನೆಲೆಗೆ ತರಲಾಗಿದೆ ಎಂದು ಟೀಕಿಸಿದರು.