ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ನಂತರ ಹಲವು ಕಾಂಗ್ರೆಸ್ ಶಾಸಕರು ತೀವ್ರ ಅಸಮಾಧಾನಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆಪ್ತ ಶಾಸಕ ಆಸೀಫ್ ಸೇಠ್ ಅವರಿಗೆ ಮಹತ್ವದ ಹುದ್ದೆ ನೀಡುವ ಮೂಲಕ ಅಸಮಾಧಾನ ಶಮನಗೊಳಿಸಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಆಪ್ತ ಹಾಗೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ(ಬುಡಾ – BUDA) ಅಧ್ಯಕ್ಷ ಸ್ಥಾನ ನೀಡಿದ್ದಾರೆ.
ಅಲ್ಪಸಂಖ್ಯಾತ ಕೋಟಾದಡಿ ತಮಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಸೀಫ್ ಸೇಠ್ ಅವರು ಪಟ್ಟುಹಿಡಿದಿದ್ದರು. ಇದಕ್ಕಾಗಿ ನಾಲ್ಕೈದು ಬಾರಿ ದೆಹಲಿಗೆ ತೆರಳಿ ಹೈಕಮಾಂಡ್ ಮಟ್ಟದಲ್ಲೂ ಭಾರಿ ಲಾಬಿ ನಡೆಸಿದ್ದರು. ಇವರ ಬೆಂಬಲಕ್ಕೆ ನಿಂತಿದ್ದ ಕಿತ್ತೂರು ಕರ್ನಾಟಕ ಭಾಗದ ಮುಸ್ಲಿಂ ಧರ್ಮಗುರುಗಳು ಹಾಗೂ ಮುಸ್ಲಿಂ ಸಮಾಜದ ಮುಖಂಡರು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಿ ಸೇಠ್ಗೆ ಮಂತ್ರಿ ಸ್ಥಾನ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದರು.
ಆದರೂ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಆಸೀಫ್ ಸೇಠ್ ಅವರಿಗೆ ಡಿಕೆ ಶಿವಕುಮಾರ್ ಅವರು ‘ಬುಡಾ’ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅಸಮಾಧಾನ ತಣಿಸಿದ್ದಾರೆ.
ಈ ಹಿಂದೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಲಕ್ಷ್ಮಣರಾವ್ ಚಿಂಗಳೆ ಅವರಿಗೆ ಈಗ ಕೊಕ್ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಚಿಂಗಳೆ ಬದಲು ಕೊನೆ ಕ್ಷಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡಲಾಗಿತ್ತು. ಆ ಸಂದರ್ಭದಲ್ಲಿ ಉಂಟಾಗಿದ್ದ ಅಸಮಾಧಾನ ತಣಿಸಲು ಚಿಂಗಳೆ ಅವರಿಗೆ ಬುಡಾ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಇದೀಗ ಹೊಸ ರಾಜಕೀಯ ಸಮೀಕರಣದ ಹಿನ್ನೆಲೆಯಲ್ಲಿ ಆ ಸ್ಥಾನವನ್ನು ಆಸೀಫ್ ಸೇಠ್ ಅವರಿಗೆ ನೀಡಲಾಗಿದೆ.