ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಅಲ್ಲದೆ ಈ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮಧ್ಯಪ್ರವೇಶಿಸಿದ್ದು, ನಾಗೇಂದ್ರ ಅವರು ಸಚಿವರಾಗಿ ಮುಂದುವರಿಯುವ ಕುರಿತು ಸರ್ಕಾರದಿಂದ ಸ್ಪಷ್ಟನೆ ಕೇಳಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಈ ಎಲ್ಲಾ ಬೆಳವಣಿಗಗಳ ಮಧ್ಯೆ ಸಚಿವ ಬಿ. ನಾಗೇಂದ್ರ ಅವರು ಬುಧವಾರ ರಾತ್ರಿ ದಿಢೀರ್ ದೆಹಲಿಗೆ ತೆರಳಿದ್ದು, ತಾವು ರಾಜೀನಾಮೆಗೆ ಸಿದ್ಧ ಎಂಬ ಸುಳಿವು ನೀಡಿದ್ದಾರೆ ಎನ್ನಲಾಗಿದೆ.
ಸದ್ಯ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರುವ ನಾಗೇಂದ್ರ ಅವರು ಇಂದು ಕಾಂಗ್ರೆಸ್ ಹೈಕಮಾಂಡ್ನ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ.
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸರಣಿ ಬೆಳವಣಿಗೆಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದ ವಿವಾದಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅವರ ಈ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ನಾಗೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ನ ಹಿರಿಯ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಮೇಲಿನ ಆರೋಪಗಳು ಮತ್ತು ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.