ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಾಲ್ಯದ ಸ್ನೇಹಿತ, ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ‘ಕ್ರೇಜಿ ಸ್ಟಾರ್’ ವಿ. ರವಿಚಂದ್ರನ್ ಅವರನ್ನು ಕಾಂಗ್ರೆಸ್, ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.
ಇತ್ತೀಚಿಗಷ್ಟೇ ನಟ ರವಿಚಂದ್ರನ್ ಅವರು ತಮ್ಮ ಬಾಲ್ಯದ ಸ್ನೇಹಿತ, ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಈ ವಿಚಾರ ರಾಜ್ಯದ ಜನರ ಗಮನ ಸೆಳೆದಿತ್ತು. ಅಲ್ಲದೆ, ಈ ಭೇಟಿಯ ಹಿಂದಿನ ಉದ್ದೇಶವೇನು ಎಂದು ನಟನ ಅಭಿಮಾನಿಗಳೂ ಸಹ ತಲೆ ಕೆಡಿಸಿಕೊಂಡಿದ್ದರು. ಇದೀಗ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ರಾಜಕೀಯ ಅಖಾಡ ಪ್ರವೇಶಿಸುತ್ತಿರುವ ವಿಚಾರ ಬಹಿರಂಗವಾಗಿದೆ.
ಕನ್ನಡ ಚಿತ್ರರಂಗದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅಪಾರ ಕೊಡುಗೆ ನೀಡಿರುವ ರವಿಚಂದ್ರನ್ ಅವರ ಕಲಾ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಸರ್ಕಾರ ಅವರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲು ನಿರ್ಧರಸಿದೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಅವರ ಕ್ಲಾಸ್ಮೇಟ್ ಆಗಿರುವ ರವಿಚಂದ್ರನ್ ಅವರ ಹೆಸರನ್ನು ಸಾಂಸ್ಕೃತಿಕ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, , ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.