ಬೆಂಗಳೂರು: ರಾಜ್ಯದಲ್ಲಿ ಬಹುಕೋಟಿ ಮೌಲ್ಯದ ಅಬಕಾರಿ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ನಾವು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರನ್ನು ರಕ್ಷಿಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪಾಲು ಇದೆ. ತಮ್ಮ ಸ್ಥಾನ ಉಳಿಸಿಕೊಳ್ಳಲು ಹಣವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಕಳುಹಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದೇ ವೇಳೆ ಸಚಿವರು ರಾಜೀನಾಮೆ ನೀಡುವವರೆಗೆ ವಿಧಾನಸಭೆಯೊಳಗಿನ ಧರಣಿಯನ್ನು ಮುಂದುವರೆಯಲಿದೆ ಎಂದೂ ತಿಳಿಸಿದರು.
ಅಬಕಾರಿ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರವು ರೂ. 5,000 ರಿಂದ 6,000 ಕೋಟಿ ಮೊತ್ತದ ಮಟ್ಟಿಗೆ ವ್ಯಾಪಿಸಿದೆ. ಈ ಹಗರಣಕ್ಕೆ ಸಂಬಂಧಿಸಿ ಸಾಕ್ಷ್ಯಗಳ ಕೊರತೆ ಇಲ್ಲ. ಲೊಕಾಯುಕ್ತರು ಅಬಕಾರಿ ಇಲಾಖೆ ಅಧಿಕಾರಿಯನ್ನು ರೂ. 25 ಲಕ್ಷ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬೀಳಿಸಿರುವುದು, ಸಂಭಾಷಣೆಯ ಪೆನ್ಡ್ರೈವ್ ಸಾಕ್ಷ್ಯಗಳು ಮತ್ತು ಲೊಕಾಯುಕ್ತರಲ್ಲಿ ಪ್ರಕರಣ ದಾಖಲಾಗಿರುವುದು ಸ್ಪಷ್ಟ ಸಾಕ್ಷ್ಯಗಳಾಗಿವೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದಾಗ ಮುಖ್ಯಮಂತ್ರಿ ಸ್ವತಃ ಸಚಿವರ ಬೆಂಬಲಕ್ಕೆ ನಿಂತಿರುವುದು ಸಂಶಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಅಬಕಾರಿ ಇಲಾಖೆಯ ಸಾವಿರಾರು ಕೋಟಿ ರೂಪಾಯಿ ಹಗರಣದಲ್ಲಿ ಕೇವಲ ರಾಜ್ಯಮಟ್ಟದಲ್ಲೇ ಅಲ್ಲ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೂ ಪಾಲು ಹೋಗಿರುವ ಅನುಮಾನ ಬಲವಾಗಿದೆ ಎಂದು ಆರೋಪಿಸಿದರು.
ಸಚಿವ ಆರ್.ಬಿ. ತಿಮ್ಮಾಪುರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ನಡೆಸಬೇಕು ಎಂದು ಆಗ್ರಹಿಸಿದರು.