ಬೆಂಗಳೂರು: ವಿಧಾನಸಭಾ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಪ್ರತಿಪಕ್ಷಗಳು ಬಹಿರಂಗಪಡಿಸಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಗುರುವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೇ ಕಾಂಗ್ರೆಸ್ ಸರ್ಕಾರ ಹಗರಣಗಳ ಜಾಲದಲ್ಲಿ ಸಿಲುಕಿದೆ ಎಂದು ಆರೋಪಿಸಿದರು.
ಈಗಾಗಲೇ ಹಲವು ಹಗರಣಗಳ ಆರೋಪ ಎದುರಿಸುತ್ತಿರುವ ಸರ್ಕಾರದ ಪಟ್ಟಿಗೆ ಅಬಕಾರಿ ಇಲಾಖೆಯಲ್ಲಿ ರೂ.6,000 ಕೋಟಿಗೂ ಅಧಿಕ ಲೂಟಿ ಎಂಬ ಹೊಸ ಹಗರಣ ಸೇರ್ಪಡೆಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿದ್ದು, VB G–RAM–G ಯೋಜನೆ ಜಾರಿಗೆ ಅಗತ್ಯವಿರುವ ಶೇ.40ರಷ್ಟು ರಾಜ್ಯದ ಪಾಲಿನ ಹಣವನ್ನು ನೀಡಲು ಸರ್ಕಾರ ಅಸಮರ್ಥವಾಗಿದೆ. ಇದೇ ಕಾರಣಕ್ಕೆ ಹೊಸ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿದರು.
ಅಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ ಎಂಬ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಆರೋಪಗಳನ್ನು ಮಾಡುತ್ತಿದೆ. ಹೊಸ ಕಾಯ್ದೆಗೆ ವಿರೋಧಿಸುತ್ತಿದೆ ಎಂದು ಹೇಳಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಏಕೈಕ ಸಾಧನೆ ಎಂದರೆ ಹಗರಣ ನಡೆಸಿರುವುದು. ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುವ ಮೂಲಕ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಯುತ್ತಿದೆ. ಆದರೆ, ಬಿಜೆಪಿ ಶಾಸಕರು ಸತ್ಯಾಂಶಗಳನ್ನು ಜನರ ಮುಂದಿಟ್ಟಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಅಬಕಾರಿ ಇಲಾಖೆ ಹಗರಣದ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ ಅವರು, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿದರು.
ಈ ಹಗರಣದಲ್ಲಿ ಕಾಂಗ್ರೆಸ್ನ ಹಲವಾರು ನಾಯಕರು, ಕೇಂದ್ರ ನಾಯಕರೂ ಕೂಡ ಭಾಗಿಯಾಗಿದ್ದಾರೆ. ಅದಕ್ಕಾಗಿಯೇ ಅಬಕಾರಿ ಸಚಿವರಿಗೆ ಬೆಂಬಲ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಅಬಕಾರಿ ಹಗರಣದಲ್ಲಿ ದೊರೆತ ಹಣವನ್ನು ಪಕ್ಕದ ರಾಜ್ಯಗಳ ಚುನಾವಣೆಗೆ ಬಳಸಲಾಗಿದೆ. ವಿಧಾನಸಭಾ ಅಧಿವೇಶನದಲ್ಲೇ ನಮ್ಮ ಆರೋಪಗಳಿಗೆ ಸಾಕಷ್ಟು ದಾಖಲೆಗಳನ್ನು ನಾವು ಒದಗಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ಜೊತೆಗೆ ಕಾನೂನು ಕ್ರಮಕ್ಕೂ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಬಿಜೆಪಿ ಶಾಸಕರ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಭಾಧ್ಯಕ್ಷರು ಸದನವನ್ನು ಸಮರ್ಪಕವಾಗಿ ನಡೆಸಲು ವಿಫಲರಾಗಿದ್ದಾರೆ. ವೈಯಕ್ತಿಕ ಆರೋಪಗಳನ್ನು ಮಾಡುವಾಗ ಸ್ಪೀಕರ್ ನಗುತ್ತಿರುವುದು ಅವರ ಸ್ಥಾನಮಾನದ ಗೌರವಕ್ಕೆ ಧಕ್ಕೆ ತಂದಿದೆ ಎಂದು ಕಿಡಿಕಾರಿದರು.