ಬೆಂಗಳೂರು: ಜೆಡಿಎಸ್ ಕಾರ್ಯಕರ್ತರ ಒತ್ತಾಯದ ಮೇರೆಗೆ 2028ರಲ್ಲಿ ರಾಜ್ಯ ರಾಜಕೀಯಕ್ಕೆ ಮರಳುವುದಾಗಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರ ಮನೋಸ್ಥೈರ್ಯವನ್ನು ಹೆಚ್ಚಿಸಲು ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ಹಳೆಯ ಮೈಸೂರು ಭಾಗದಲ್ಲಿ ಕುಮಾರಸ್ವಾಮಿ ಸಂಚರಿಸುತ್ತಿದ್ದಾರೆ. ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡರು ತಮ್ಮ ಜೊತೆಯಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಪ್ರದೇಶದ ಮೇಲೆ ಹಿಡಿತ ಹೊಂದಿರುವ ಜೆಡಿಎಸ್, 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಬಿಜೆಪಿ ನಾಯಕರು ಇದರಿಂದ ಲಾಭ ಮಾಡಿಕೊಂಡು ಕೆಲವು ಸ್ಥಾನಗಳನ್ನು ಗೆಲ್ಲಬಹುದು ಎಂದು ಅರಿತುಕೊಂಡರು. ಕೇಂದ್ರ ರೈಲ್ವೆ ರಾಜ್ಯ ಸಚಿವ ಮತ್ತು ಜಲಶಕ್ತಿ ವಿ ಸೋಮಣ್ಣ ಅವರು ಜೆಡಿಎಸ್ ಮುಖ್ಯಸ್ಥ ಎಚ್ಡಿ ದೇವೇಗೌಡರ ಬೆಂಬಲದೊಂದಿಗೆ ತುಮಕೂರಿನಲ್ಲಿ ಸುಲಭವಾಗಿ ಗೆದ್ದರು.
ಇತ್ತೀಚೆಗೆ ಕುಮಾರಸ್ವಾಮಿಯವರನ್ನು ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಿದ್ದ ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಮಾತನಾಡಿ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ 2028 ರ ಚುನಾವಣೆಯಲ್ಲಿ ಹಳೆಯ ಮೈಸೂರು ಪ್ರದೇಶದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಮೈತ್ರಿ ಮಾಡಿಕೊಂಡ ತಕ್ಷಣ, ನಾನು ಕುಮಾರಸ್ವಾಮಿಯನ್ನು ನನ್ನ ನಾಯಕ ಎಂದು ಹೃದಯಪೂರ್ವಕವಾಗಿ ಒಪ್ಪಿಕೊಂಡೆ ಮತ್ತು ಅವರ ಆಶೀರ್ವಾದ ಪಡೆಯಲು ಬಿಡದಿಯಲ್ಲಿರುವ ಅವರ ತೋಟದ ಮನೆಗೆ ಹೋಗಿದ್ದೆ ಎಂದು ಹೇಳಿದ್ದಾರೆ.
ದೇವೇಗೌಡ ಮತ್ತು ಕುಮಾರಸ್ವಾಮಿ ಒಂದು ಶಕ್ತಿ ಎಂದು ಇತರ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಮ್ಯಾಜಿಕ್ ಮಾಡುತ್ತದೆ. ಜೆಡಿಎಸ್ ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಉತ್ತಮ ನೆಲೆಯನ್ನು ಹೊಂದಿದ್ದು, ಕನಿಷ್ಠ 30-35 ಸ್ಥಾನಗಳನ್ನು ಗೆಲ್ಲಬಹುದು ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಜಿಲ್ಲಾ ಪಂಚಾಯತ್/ತಾಪಂ ಚುನಾವಣೆಗಳಲ್ಲಿಯೂ ಮೈತ್ರಿಕೂಟ ಉತ್ತಮ ಫಲಿತಾಂಶ ತರಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ದೇವೇಗೌಡ ಮತ್ತು ಕುಮಾರಸ್ವಾಮಿ ಬಿಜೆಪಿ ಕೇಂದ್ರ ನಾಯಕರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುವುದರಿಂದ, ಪಕ್ಷವು ತನ್ನ ಪುನರುಜ್ಜೀವನವನ್ನು ನಿರೀಕ್ಷಿಸಬಹುದು ಎಂದಿದ್ದಾರೆ.
ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಜೆಪಿ ಒಪ್ಪಿಕೊಂಡಿರುವ ಬಗ್ಗೆ ಮಾತನಾಡಿದ ಅವರು, ಇದೆಲ್ಲವೂ ಜೆಡಿಎಸ್ನ ಕಾರ್ಯಕ್ಷಮತೆಯನ್ನು ಅವಲಂಬಿಸಿದೆ ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ, ಕರ್ನಾಟಕ ವಿಧಾನಸಭೆಯಲ್ಲಿ ಎನ್ಡಿಎ 81 ಶಾಸಕರನ್ನು ಹೊಂದಿದೆ , ಬಿಜೆಪಿ 63 ಮತ್ತು ಜೆಡಿಎಸ್ 18 ಶಾಸಕರಿದ್ದಾರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವೀರಶೈವ-ಲಿಂಗಾಯತರು ಮತ್ತು ಜೆಡಿಎಸ್ ಒಕ್ಕಲಿಗರಲ್ಲಿ ಪ್ರಭಾವ ಬೀರುತ್ತಿರುವುದರಿಂದ, ಈ ಮೈತ್ರಿಯಿಂದ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಎರಡು ಪಕ್ಷಗಳು ಕೆಲಸ ಮಾಡುವ ಸಾಧ್ಯತೆಯಿದೆ ಎಂದಿದ್ದಾರೆ.