ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಟಿಕೆಟ್ ವಂಚಿತರಾಗುವ ಭಯದಿಂದಲೇ ಮಾಜಿ ಶಾಸಕ ಪ್ರೀತಂಗೌಡ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿಯೇ ಅವರು ಒಂದು ಕಾಲು ಬಿಜೆಪಿ ಮತ್ತೊಂದು ಕಾಲು ಕಂಗ್ರೆಸ್ ಪಕ್ಷದಲ್ಲಿ ಇರಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಸದೃಢವಾಗಿದ್ದು, ಇದನ್ನು ಕಳೆದ ಸಮಾವೇಶದಲ್ಲಿಯೇ ಸಾಬೀತು ಮಾಡಿದ್ದೇವೆ. ಮುಂದಿನ 2028ರ ವಿಧಾನಸಭೆ ಚುನಾವಣೆ ಬಳಿಕ ನಿಜವಾಗಿಯೂ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
ಜೆಡಿಎಸ್–ಬಿಜೆಪಿ ಮೈತ್ರಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಇರುವ ಆತಂಕ ಕಾಡುತ್ತಿರುವ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜೆಡಿಎಸ್–ಬಿಜೆಪಿ ಮೈತ್ರಿ ಇದ್ದಾಗಲೂ ಲೋಕಸಭಾ ಚುನಾವಣೆಯಲ್ಲಿ ಪ್ರೀತಂಗೌಡರು ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಒಂದು ಕಾಲನ್ನು ಕಾಂಗ್ರೆಸ್ಗೆ ಇಟ್ಟಿದ್ದಾರೆ. ಮೈತ್ರಿಯಿಂದ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ನಿಂದಲೇ ಅಥವಾ ಸ್ವತಂತ್ರವಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಗೆ ₹500 ಕೋಟಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ತಂದಿರುವುದನ್ನು ಸ್ವಾಗತಿಸಿದ ಅವರು, ಇದರ ಲಾಭ ಹಾಸನಕ್ಕೂ ದೊರೆಯಲಿದೆ. ಇದೇ ರೀತಿಯಲ್ಲಿ ಜಿಲ್ಲೆಯಲ್ಲೂ ಬೃಹತ್ ಕೈಗಾರಿಕೆ ತರಲು ಮನವಿ ಮಾಡಲಾಗಿದೆ ಎಂದರು.
ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಮೈತ್ರಿ ಮಾಡಿಕೊಳ್ಳಲು ನಾವು ಮುಲಾಜಿಗೆ ಹೋಗಿಲ್ಲ. ಎಚ್.ಡಿ. ದೇವೇಗೌಡ ಹಾಗೂ ಪ್ರಧಾನಿ ಮೋದಿ ಅವರ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಪ್ರೀತಂಗೌಡರು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಾತ್ರ, ಹೈಕಮಾಂಡ್ ಅಲ್ಲ. ಅವರ ಮಾತಿನಿಂದ ಎಲ್ಲವೂ ನಡೆಯುವುದಿಲ್ಲ. ಸಮಯ ಬಂದಾಗ ನಮ್ಮ ಶಕ್ತಿಯನ್ನು ಪ್ರದರ್ಶಿಸುತ್ತೇವೆ ಎಂದು ತಿರುಗೇಟು ನೀಡಿದರು.