ನಾಯಕತ್ವ ಬದಲಾವಣೆ ವಿಚಾರವಾಗಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸುತ್ತಿತ್ತು. ಯತೀಂದ್ರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಣದವರು ತಿರುಗೇಟು ನೀಡುತ್ತಿದ್ದರು. ಇದು ಕಾಂಗ್ರೆಸ್ ಹೈಕಮಾಂಡ್ ತಲೆನೋವಿಗೂ ಕಾರಣವಾಗಿತ್ತು. ಯತೀಂದ್ರ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ನವೆಂಬರ್ ತಿಂಗಳಿನಿಂದ ನಾನು ಎಲ್ಲವನ್ನೂ ಹೇಳಿ ಬಿಟ್ಟಿದ್ದೀನಿ. ಇನ್ನು ಈ ವಿಚಾರದಲ್ಲಿ ಏನೂ ಹೇಳುವುದಿಲ್ಲ ಎಂದರು. ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಹೇಳುವುದು ಹೇಳಿಯಾಗಿದೆ. ಇನ್ನು ಮುಂದೆ ಈ ವಿಚಾರವನ್ನು ನನ್ನ ಮುಂದೆ ತರಬೇಡಿ ಎಂದರು. ನಾಯಕತ್ವ ಬದಲಾವಣೆ ಕುರಿತು ಮಾತನಾಡಬಾರದು ಎಂದು ಪುತ್ರನಿಗೆ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿರುವ ಸಾಧ್ಯತೆ ಇದೆ. ಹೀಗಾಗಿ ಈ ವಿಚಾರದಲ್ಲಿ ಇನ್ನು ಮುಂದೆ ಮಾತನಾಡಲ್ಲ ಎಂದು ಯತೀಂದ್ರ ಹೇಳಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಹಲವು ಬಾರಿ ತಂದೆಯ ಪರವಾಗಿ ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಡಿಸೆಂಬರ್ನಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಸಹ ಯತೀಂದ್ರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವು ದಿನಗಳ ಹಿಂದೆ ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳುವ ಮೂಲಕ ಯತೀಂದ್ರ ಸಿದ್ದರಾಮಯ್ಯ ಚರ್ಚೆಯನ್ನು ಹುಟ್ಟು ಹಾಕಿದ್ದರು.