ಬೆಂಗಳೂರು: ಮಾಜಿ ಸಂಸದ, ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣ ಅಖಾಡಕ್ಕೆ ಮರು ಪ್ರವೇಶ ಮಾಡಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ದಟ್ಟವಾಗಿ ಹಬ್ಬಿದೆ. ಕೆಲವು ವರ್ಷಗಳಿಂದ ಸಕ್ರಿಯ ರಾಜಕಾರಣ ಹಾಗೂ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಅನಂತ್ ಕುಮಾರ್ ಹೆಗಡೆ, ಮತ್ತೆ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಭಟ್ಕಳದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
ಮುಂದಿನ ತಿಂಗಳು ಮಾರ್ಚ್ 8ರಂದು ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಭಟ್ಕಳ ಅನಂತ್ ಕುಮಾರ್ ಹೆಗಡೆಯವರ ಹಳೆಯ ರಾಜಕೀಯ ಹೋರಾಟದ ಕ್ಷೇತ್ರ. ಇಲ್ಲಿಂದಲೇ ಮತ್ತೆ ಅವರು ರಾಜಕೀಯದಲ್ಲಿ ಫಿನಿಕ್ಸ್ ನಂತೆ ಎದ್ದು ಬರಲಿದ್ದಾರೆ ಎಂದು ಅವರ ಅಭಿಮಾನಿಗಳು ಊಹಿಸಿಕೊಂಡಿದ್ದಾರೆ.
ಹಿಂದೂ ಸಂಗಮ ಆಯೋಜಕರು ಮತ್ತು ಸಂಘ ಪರಿವಾರದ ನಾಯಕರು ಅನಂತ್ ಕುಮಾರ್ ಹೆಗಡೆಯವರನ್ನು ಮತ್ತೆ ರಾಜಕೀಯ ಅಖಾಡಕ್ಕೆ ಧುಮುಕಿಸುವ ಕುರಿತು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಘ ಪರಿವಾರದ ಹಿರಿಯ ನಾಯಕರ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹೆಗಡೆಯವರ ಮನವೊಲಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.