ಬೆಂಗಳೂರು: ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕೃಷ್ಣ ಬೈರೇಗೌಡ ಅವರ ಈ ಹೇಳಿಕೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.
ನನಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯನವರ ಪರ್ಯಾಯ ವ್ಯವಸ್ಥೆ ಕಷ್ಟಸಾಧ್ಯ. ಹಾಗೆಂದು ಬೇರೆಯವರಿಗೆ ಈ ಸಾಮರ್ಥ್ಯ ಇಲ್ಲ ಎಂದು ನಾನು ಹೇಳುವುದಿಲ್ಲ. ಅವರ ನಾಯಕತ್ವವೇ ಬೇರೆ, ಬೇರೆಯವರ ಸಾಮರ್ಥ್ಯವೇ ಬೇರೆ ಎಂದು ಕಂದಾಯ ಸಚಿವರು ವಿಶ್ಲೇಷಿಸಿದ್ದಾರೆ.
ಉಪಮುಖ್ಯಮಂತ್ರಿಯಾಗಿರುವ ಡಿಕೆಶಿಯವರು ಪಕ್ಷ ಸಂಘಟನೆಯಲ್ಲಿ ಮುಂದಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ರಾಜಕಾರಣದಲ್ಲಿ ಇಂತಹ ಕಾಂಬಿನೇಷನ್ ತುಂಬಾ ಅಪರೂಪ ಎಂದು ಸಿಎಂ, ಡಿಸಿಎಂ ಬಗ್ಗೆ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರಂತಹ ನಾಯಕತ್ವ ಇನ್ನೆಲ್ಲೂ ಇಲ್ಲ. ನಮಗೆಲ್ಲಾ ಅವರಿಂದ ಗೌರವ ಹೆಚ್ಚಿದೆ. ನಾಯಕತ್ವ ಬದಲಾವಣೆ ಕುರಿತಂತೆ ನಾನು ಹೆಚ್ಚು ಮಾತನಾಡುವುದಿಲ್ಲ. ಅದರ ಬಗ್ಗೆ ಹೇಳಲು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸು, ರಾಮಕೃಷ್ಣ ಹೆಗಡೆಯವರಂತಹ ದಿಗ್ಗಜರ ಸಾಲಿನಲ್ಲಿ ಸಿದ್ದರಾಮಯ್ಯನವರು ನಿಲ್ಲುತ್ತಾರೆ. ಹೀಗಾಗಿ ನಾಯಕತ್ವದ ಬದಲಾವಣೆ ಕಷ್ಟಸಾಧ್ಯ ಎಂದು ಪುನರುಚ್ಚರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲೇ ಅತಿ ಹೆಚ್ಚು ದಿನಗಳ ಕಾಲ ಆಡಳಿತ ನಡೆಸಿದ ದಾಖಲೆಗೆ ಪಾತ್ರರಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಇದೊಂದು ದಾಖಲೆಯೇ ಸರಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.