ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರ ಪತ್ನಿ ಉಷಾ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಅವರು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಉಪಾಹಾರದ ಜೊತೆಗೆ ಅನೌಪಚಾರಿಕ ಮಾತುಕತೆ ನಡೆಸಿದರು.
ಇಂದು ಬೆಳಗ್ಗೆ ಪತ್ನಿ ಹಾಗೂ ಸಹೋದರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿ ಕೆ ಶಿವಕುಮಾರ್ ಕೆಲ ಹೊತ್ತು ಕಳೆದರು, ಸಿದ್ದರಾಮಯ್ಯ ಅವರಿಗೆ ಉಡುಗೊರೆ ನೀಡಿ ಬೆಳಗಿನ ಉಪಾಹಾರ ಸೇವಿಸಿ ಮಾತುಕತೆ ನಡೆಸಿ ಬಂದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಅಂಗವಾಗಿ ಇಂದು ಕುಟುಂಬದೊಂದಿಗೆ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಾಡಿದರು.
ಕಳೆದ ನವೆಂಬರ್ ತಿಂಗಳಲ್ಲಿ ಅಧಿಕಾರ ಹಸ್ತಾಂತರವಾಗುತ್ತದೆ ಎಂದು ಭಾರೀ ಸುದ್ದಿಯಾದ ನಂತರ ಹೈಕಮಾಂಡ್ ಸೂಚನೆ ಮೇರೆಗೆ ಡಿಸೆಂಬರ್ ನಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಮನೆಯಲ್ಲಿ ಡಿ ಕೆ ಶಿವಕುಮಾರ್ ಹಾಗೂ ನಂತರ ಸ್ವಲ್ಪ ದಿನಗಳಲ್ಲಿ ಡಿ ಕೆ ಶಿವಕುಮಾರ್ ಮನೆಯಲ್ಲಿ ಇಬ್ಬರ ಮಧ್ಯೆ ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್ ಭಾರೀ ಸುದ್ದಿಯಾಗಿತ್ತು.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ಹಾಗೂ ಪಕ್ಷದ ಐಕ್ಯತೆಯ ಸಂದೇಶ ಸಾರುವ ಉದ್ದೇಶದಿಂದ ಉಭಯ ನಾಯಕರು ಅಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.
ರಾಜ್ಯದ ರಾಜಕೀಯದಲ್ಲಿ ಈ ಉಪಾಹಾರ ಸಭೆಗಳು ಪ್ರಮುಖ ಚರ್ಚೆಯ ವಿಷಯವಾಗಿದ್ದು, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳು ತೀವ್ರಗೊಂಡ ಸಂದರ್ಭಗಳಲ್ಲಿ ಇವು ವಿಶೇಷ ಮಹತ್ವ ಪಡೆದಿವೆ.
ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ತಮ್ಮ ನಡುವೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಈ ಉಪಾಹಾರ ಕೂಟ ಸಹ ಜನತೆ ಮುಂದೆ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸುವ ಭಾಗವಾಗಿಯೇ ನೋಡಲಾಗುತ್ತಿದೆ.
ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಸರ್ಕಾರದ ಮುಂದಿನ ನಿರ್ಧಾರಗಳಿಗೆ ಸಂಬಂಧಿಸಿದ ಯಾವುದೇ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದ್ದು, ಅದರಂತೆ ನಡೆದುಕೊಳ್ಳುವುದಾಗಿ ಇಬ್ಬರೂ ಹೇಳುತ್ತಾ ಬಂದಿದ್ದಾರೆ.