ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಭಾಗದಲ್ಲಿ ಮುಸ್ಲಿಂ ಮತದಾರರನ್ನು ಗುರಿಯಾಗಿಸಿ, ಅವರು ಬಾಂಗ್ಲಾದೇಶಿ ವಲಸಿಗರು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ನಗರದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಮತ ಹಾಕಿಸಿಕೊಳ್ಳುತ್ತಿದ್ದಾಗ ಮುಸ್ಲಿಮರೆಲ್ಲರೂ ಕುಮಾರಸ್ವಾಮಿ ಅವರ ಪಾಲಿಗೆ ಸ್ಥಳೀಯರಾಗಿದ್ದರು. ಆದರೆ, ಈಗ ಎಸ್ಐಆರ್ ಕಾರಣಕ್ಕೆ ಬಾಂಗ್ಲಾದೇಶದವರಾಗಿ ಕಾಣುತ್ತಿದ್ದಾರೆ. ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಎಸ್ ಐಆರ್ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ಗೊಂದಲ ಸೃಷ್ಟಿಸುತ್ತಾ ಉದ್ದೇಶಪೂರ್ವಕವಾಗಿ ಒಂದು ಕೋಮಿನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ತಳಮಟ್ಟದಲ್ಲಿ ಎಸ್ ಐಆರ್ ಪ್ರಕ್ರಿಯೆಯಲ್ಲಿ ತೊಡಗಿರುವ ಶಿಕ್ಷಕರ ಮೇಲೆ ಗೂಬೆ ಕೂರಿಸಿ, ಅವರಿಗೆ ಅವಮಾನ ಮಾಡುತ್ತಿದ್ದಾರೆ. ಇದನ್ನು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿದೆ ವಿನಾ: ರಾಜ್ಯ ಸರ್ಕಾರ ಅಲ್ಲ ಎಂದರು.
ಆಯೋಗಕ್ಕೆ ಸಂಬಂಧಿಸಿದ ಕರ್ತವ್ಯಗಳಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯೋಗದ ನಿಯಂತ್ರಣದಲ್ಲಿರುತ್ತಾರೆ. ಮಾನದಂಡಕ್ಕೆ ಅನುಗುಣವಾಗಿಯೇ ಎಸ್ ಐಆರ್ ನಡೆಯುತ್ತಿದೆ. ಅಗತ್ಯ ದಾಖಲೆ ಕೊಟ್ಟರಷ್ಟೇ ಪ್ರಕ್ರಿಯೆ ನಡೆಸಲು ಸಾಧ್ಯ. ಹೀಗಿರುವಾಗ ಅಕ್ರಮ ಹೇಗೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದರು.