ಬೆಂಗಳೂರು: ರಾಜ್ಯ ರಾಜಕೀಯಕ್ಕೆ ತಕ್ಷಣವೇ ಮರಳಲಿದ್ದಾರೆ ಎಂಬ ಸುದ್ದಿಗಳನ್ನು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ನಿರಾಕರಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಕೇಂದ್ರ ಸಚಿವರಾಗಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವುದರ ಜೊತೆಗೆ ರಾಜ್ಯದಲ್ಲೂ ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ ಸ್ಪಷ್ಟಪಡಿಸಿದರು.
"ನಾನು ರಾಜ್ಯಕ್ಕೆ ಬರುತ್ತಿದ್ದೇನೆ ಎಂದರೆ ನಾಳೆಯೇ ರಾಜ್ಯ ರಾಜಕೀಯಕ್ಕೆ ಮರಳುತ್ತಿದ್ದೇನೆ ಎಂದಲ್ಲ. ನಾನು ರಾಜ್ಯದಲ್ಲೂ ಕೆಲಸ ಮಾಡುತ್ತಿದ್ದೇನೆ, ಕೇಂದ್ರದಲ್ಲೂ ಕೆಲಸ ಮಾಡುತ್ತಿದ್ದೇನೆ.
"ಪ್ರಸ್ತುತ ನಾನು ಕೇಂದ್ರ ಸಚಿವನಾಗಿದ್ದು, ಲೋಕಸಭಾ ಸದಸ್ಯನಾಗಿ ಇನ್ನೂ ಮೂರು ವರ್ಷಗಳ ಅವಧಿಯಿದೆ. ಕೇಂದ್ರದಲ್ಲಿ ನನಗೆ ನೀಡಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ಅದರ ಜೊತೆಗೆ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸವನ್ನೂ ಸಕ್ರಿಯವಾಗಿ ಮಾಡುತ್ತೇನೆ" ಎಂದು ತಿಳಿಸಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಒತ್ತಡ ಪಕ್ಷದ ಕಾರ್ಯಕರ್ತರಿಂದ ಇದೆ ಎಂದು ಹೇಳಿದರು.
ಈ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಹಾಗೂ ಹಿರಿಯೂರು ಕ್ಷೇತ್ರದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ. ಇನ್ನೂ ಸಮಯವಿದೆ. ಮುಂದೇನು ಮಾಡಬೇಕು ಎಂಬುದನ್ನು ಸೂಕ್ತ ಸಮಯದಲ್ಲಿ ನಿರ್ಧರಿಸುತ್ತೇವೆ ಎಂದು ಹೇಳಿದರು.