ರಾಹುಲ್ ಗಾಂಧಿ ಅವರನ್ನು ಸನ್ಮಾನಿಸಿದ ಡಿಕೆ.ಶಿವಕುಮಾರ್ (ಸಂಗ್ರಹ ಚಿತ್ರ) 
ರಾಜಕೀಯ

ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ; 2 ದಿನಗಳಲ್ಲಿ ಸ್ಪಷ್ಟ ಚಿತ್ರಣ!

ರಾಹುಲ್ ಗಾಂಧಿ ವಾಪಸಾದ ಬಳಿಕ ಅವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸುತ್ತೇವೆ. ಸಾಧ್ಯವಾದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು.

ಬೆಂಗಳೂರು: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿರುವ ಬೆನ್ನಲ್ಲೇ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮತ್ತೆ ವೇಗ ಪಡೆದುಕೊಂಡಿದೆ. '

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರನ್ನು ಶೀಘ್ರದಲ್ಲೇ ದೆಹಲಿಗೆ ಕರೆಯುವ ಸಾಧ್ಯತೆ ಇದ್ದು, ಮುಂದಿನ ಎರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದೆಹಲಿಗೆ ತೆರಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ವಾಪಸಾದ ಬಳಿಕ ಅವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸುತ್ತೇವೆ. ಸಾಧ್ಯವಾದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

ಮೂಲಗಳ ಪ್ರಕಾರ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡ ಕೇರಳದಿಂದ ದೆಹಲಿಗೆ ತೆರಳುತ್ತಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ ಗುರುವಾರ ಡೆಹ್ರಾಡೂನ್‌ಗೆ ತೆರಳುವ ಸಾಧ್ಯತೆ ಇದೆ. ಅಲ್ಲಿ ತಾಯಿ ಸೋನಿಯಾ ಗಾಂಧಿ ಸೇರಿದಂತೆ ಕುಟುಂಬ ಸದಸ್ಯರು ವಿಶ್ರಾಂತಿಗಾಗಿ ತಂಗಿದ್ದಾರೆ. ಹೀಗಾಗಿ ಅವರು ಡೆಹ್ರಾಡೂನ್‌ಗೆ ತೆರಳುವ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ದೆಹಲಿಯಲ್ಲಿರುವ ಕಾಂಗ್ರೆಸ್ ಶಾಸಕರೊಬ್ಬರು ತಿಳಿಸಿದ್ದಾರೆ.

ಇತ್ತ ಸಚಿವ ಸ್ಥಾನಾಕಾಂಕ್ಷಿಗಳ ಚಟುವಟಿಕೆಗಳೂ ಜೋರಾಗಿವೆ. ರಾಮದುರ್ಗ ಶಾಸಕ ಅಶೋಕ್ ಪಟ್ಟಣ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು, "ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಮುಖ್ಯಮಂತ್ರಿ ನಾಳೆಯೇ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಆಗಸ್ಟ್ 6ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳ್ಳಲಿದೆ. ಆಷಾಢ ಮಾಸಕ್ಕೂ ಸಚಿವ ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧ ಇಲ್ಲ" ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತೀವ್ರ ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಹೈಕಮಾಂಡ್‌ನ ಅಂತಿಮ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

ಭಾರತದಲ್ಲಿ ಮುಸ್ಲಿಂ ಇರಬಾರದು ಎಂದು ಭಾವಿಸುವ ಹಿಂದೂ ಹಿಂದೂವೇ ಅಲ್ಲ- ಅಮೆರಿಕದಲ್ಲಿ ಮೋಹನ್ ಭಾಗವತ್

ಐಕಾನಿಕ್ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಫೋಟೋ!

Nepal floods: ಮೃತರ ಸಂಖ್ಯೆ 675ಕ್ಕೆ ಏರಿಕೆ; ರಾಸುವಾ ಜಲವಿದ್ಯುತ್ ಯೋಜನೆ ಸ್ಥಳದಿಂದ ನಾಲ್ವರು ಭಾರತೀಯರ ರಕ್ಷಣೆ!

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!