ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
ಇಂದು ಬೆಳಗ್ಗೆ ಸಿಎಂ ಡಿ ಕೆ ಶಿವಕುಮಾರ್ ಕರ್ನಾಟಕ ಭವನಕ್ಕೆ ಆಗಮಿಸಿದರು. ಈ ಭೇಟಿ ಮಾತುಕತೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನಿನ್ನೆ ಬುಧವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ಮೂಲಗಳ ಪ್ರಕಾರ, ಈ ಸಭೆ ಮೊದಲು ಭಾನುವಾರ ನಿಗದಿಯಾಗಿದ್ದರೂ ಬಳಿಕ ಇಂದು ಗುರುವಾರಕ್ಕೆ ಮುಂದೂಡಲಾಯಿತು.
ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ತೀವ್ರ ಲಾಬಿ ನಡೆಯುತ್ತಿರುವ ಮಧ್ಯೆ ಈ ಮಹತ್ವದ ಸಭೆ ನಡೆಯುತ್ತಿದೆ. ಸಚಿವ ಸ್ಥಾನಗಳಿಗೆ ಸಂಬಂಧಿಸಿದಂತೆ ಒಮ್ಮತ ಮೂಡಿದರೆ, ಮುಂದಿನ ವಾರವೇ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕರ್ನಾಟಕ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಯನ್ನು ಒಳಗೊಂಡಂತೆ ಒಟ್ಟು 34 ಸಚಿವರಿರಲು ಅವಕಾಶವಿದೆ. ಪ್ರಸ್ತುತ ಸಂಪುಟದಲ್ಲಿ ಕೇವಲ 14 ಮಂದಿ ಸಚಿವರಿದ್ದು, ಇನ್ನೂ 20 ಸ್ಥಾನಗಳು ಖಾಲಿ ಇವೆ.
ಈ ಹಂತದಲ್ಲಿ ಸುಮಾರು 15 ಖಾಲಿ ಸ್ಥಾನಗಳನ್ನು ಭರ್ತಿ ಮಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪೂರ್ಣಗೊಳ್ಳುವವರೆಗೆ ಐದು ಸಚಿವ ಸ್ಥಾನಗಳನ್ನು ಖಾಲಿ ಇರಿಸುವ ಯೋಜನೆಯನ್ನು ಕಾಂಗ್ರೆಸ್ ಹೊಂದಿದೆ ಎಂದು ತಿಳಿದುಬಂದಿದೆ.
ಆದರೆ, ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಲಭ್ಯವಿರುವ ಸ್ಥಾನಗಳು ಸೀಮಿತವಾಗಿರುವುದರಿಂದ, ಜಾತಿ ಹಾಗೂ ಪ್ರಾದೇಶಿಕ ಸಮತೋಲನ ಕಾಪಾಡುವುದರ ಜೊತೆಗೆ ಸಚಿವ ಸ್ಥಾನ ಸಿಗದ ನಾಯಕರ ಅಸಮಾಧಾನವನ್ನೂ ನಿಯಂತ್ರಿಸುವ ಸವಾಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿದೆ.