ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ನ ಇತರೆ ನಾಯಕರು ಇಂದು ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯನವರು ತಮ್ಮ ಆಪ್ತರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಮಹತ್ವದ ಬದಲಾವಣೆಗೆ ಒತ್ತು ನೀಡಿದ್ದು, ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಖಾಲಿ ಇರುವ 20 ಸಚಿವ ಸ್ಥಾನಗಳಲ್ಲಿ ಸುಮಾರು 60 ಶೇಕಡಾ ಸ್ಥಾನಗಳನ್ನು ಹಿಂದುಳಿದ ವರ್ಗ (OBC), ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡುವ ಸಾಧ್ಯತೆ ಇದೆ. ಅಲ್ಲದೆ, ಹೊಸ ಸಚಿವರ ಪೈಕಿ ಸುಮಾರು 70 ಶೇಕಡಾ ಮಂದಿ ಮೊದಲ ಬಾರಿಗೆ ಸಚಿವರಾಗಲಿದ್ದು, ಕನಿಷ್ಠ ಇಬ್ಬರು ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.
ಮೊದಲ ಸುತ್ತಿನ ಸಭೆಯಲ್ಲಿ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್, ಈ ಮಾನದಂಡಗಳಿಗೆ ಅನುಗುಣವಾಗಿ ಸಚಿವರ ಪಟ್ಟಿಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದರು. ಇದೇ ವೇಳೆ, ಹಳೆ ಹೆಸರನ್ನೇ ತಂದರೆ ಹೊಸತನ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಇದಾದ ಬಳಿಕ ಉಭಯ ನಾಯಕರು ಪರಿಷ್ಕೃತ ಪಟ್ಟಿಯನ್ನು ಹೈಕಮಾಂಡ್ಗೆ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮರಳಿದ ಬಳಿಕ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಿದ್ದಾರೆ.