ಬೆಂಗಳೂರು: ಬಿಡದಿ ಟೌನ್ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಇದೀಗ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕ್ರೆಡಿಟ್ ವಾರ್ ಆರಂಭವಾಗಿದೆ.
ಬಿಡದಿ ಟೌನ್ಶಿಪ್ ವಿರೋಧಿಸಿ ಶುಕ್ರವಾರ ಪ್ರತಿಭಟನೆ ನಡೆಸಿದ ಬಿಜೆಪಿ ಬೆಂಗಳೂರಿನಿಂದ ಬಿಡದಿಯವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಮಿತ್ರ ಪಕ್ಷ ಜೆಡಿಎಸ್ ಸಹ ತಾನು ಪ್ರತ್ಯೇಕವಾಗಿ ಪಾದಯಾತ್ರೆ ಮಾಡುವುದಾಗಿ ಶನಿವಾರ ಘೋಷಿಸಿದೆ.
ಜುಲೈ 30, 31 ಮತ್ತು ಆಗಸ್ಟ್ 1 ರಂದು ಸುಮಾರು 38 ಕಿಲೋಮೀಟರ್ಗಳ ಮೂರು ದಿನಗಳ ಪಾದಯಾತ್ರೆ ನಡೆಸುವುದಾಗಿ ಜೆಡಿಎಸ್ ಘೋಷಣೆ ಮಾಡಿದೆ.
ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪಾದಯಾತ್ರೆ ದಿನಾಂಕ ಮತ್ತು ಪಾದಯಾತ್ರೆ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.
ಜುಲೈ 30 ರಂದು ಭೈರಮಂಗಲದಿಂದ ಪಾದಯಾತ್ರೆ ಪ್ರಾರಂಭ ಆಗಿ ಆಗಸ್ಟ್ 1 ರಂದು ಫ್ರೀಡಂ ಪಾರ್ಕ್ ನಲ್ಲಿ ಪಾದಯಾತ್ರೆ ಅಂತ್ಯವಾಗಲಿದೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ನಾಯಕರು ತಿಳಿಸಿದರು.
ಜುಲೈ 31 ರಂದು ಮಾಜಿ ಪ್ರಧಾನಿ ದೇವೇಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಆಗಸ್ಟ್ 1 ರಂದು ಪಾದಯಾತ್ರೆ ಫ್ರೀಡಂ ಪಾರ್ಕ್ನಲ್ಲಿ ಅಂತ್ಯವಾಗಲಿದೆ. ಅಂದು ಬೃಹತ್ ಸಮಾವೇಶದ ಮೂಲಕ ಬಿಡದಿ ಟೌನ್ಶಿಪ್ ಯೋಜನೆ ರದ್ದು ಮಾಡುವಂತೆ ಜೆಡಿಎಸ್ ಆಗ್ರಹ ಮಾಡಲಿದೆ ಎಂದು ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.
ಸರ್ಕಾರ ಈ ಯೋಜನೆ ರದ್ದು ಮಾಡೋವರೆಗೂ ಜೆಡಿಎಸ್ ಹೋರಾಟ ಮಾಡಲಿದೆ. ಪಾದಯಾತ್ರೆ ಬಳಿಕ ವಿಧಾನಸೌಧ ಚಲೋ ಸಹ ಮಾಡ್ತೀವಿ. ಬಿಜೆಪಿಗೂ ಮೊದಲೇ ನಾವು ಪಾದಯಾತ್ರೆಗೆ ನಿರ್ಧಾರ ಮಾಡಿದ್ವಿ. ಅದರಂತೆ ಇಂದು ಘೋಷಣೆ ಮಾಡಿದ್ದೇವೆ ಎಂದು ಕೃಷ್ಣಾರೆಡ್ಡಿ ಹೇಳಿದರು.