ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಗುರುವಾರ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದ್ದು, ಈ ಬಾರಿ ಹೊಸ ಸಮೀಕರಣದೊಂದಿಗೆ, ಸಚಿವ ಸ್ಥಾನ ಭರ್ತಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತ ತಲುಪುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಅತಿದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಪ್ರಮುಖ ನಾಯಕರ ಬಳಿ ಕ್ಷಮೆಯಾಚಿಸುವ ಮೂಲಕ ತೀವ್ರ ಸಂಚಲನ ಮೂಡಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ತಮ್ಮ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಷಡ್ಯಂತ್ರ ಹಾಗೂ ಪಿತೂರಿ ನಡೆಸಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಇತ್ತೀಚಿಗೆ ನಡೆದ ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ತಪ್ಪು ಮಾಹಿತಿ ಹಾಗೂ ಸುಳ್ಳು ಸುದ್ದಿಗಳನ್ನು ಹರಡಲಾಗಿದೆ ಎಂದು ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ನನ್ನಿಂದ ಏನಾದರೂ ತಪ್ಪಾಗಿದ್ದರೆ ನಾನು ಹೈಕಮಾಂಡ್ ಬಳಿ ಕ್ಷಮೆ ಕೇಳುತ್ತೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಲ್ಲೂ ಕ್ಷಮೆಯಾಚಿಸುತ್ತೇನೆ ಎಂದು ಮಾಜಿ ಸಚಿವ ಹೇಳಿದ್ದಾರೆ.
ದಾವಣಗೆರೆ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ನಾನು ಮನವಿ ಮಾಡಿದ್ದು ನಿಜ. ಆದರೆ ಬಳಿಕ ಅಗಲಿದ ನಾಯಕರ/ಮೃತರ ಕುಟುಂಬಕ್ಕೇ ಟಿಕೆಟ್ ನೀಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.