ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಜುಲೈ 30 ಗುರುವಾರ ಅಪರಾಹ್ನ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರವು ಅನೌಪಚಾರಿಕವಾಗಿ ರಾಜ್ಯಪಾಲರ ಕಚೇರಿಗೆ ಮಾಹಿತಿ ನೀಡಿದೆ.
ರಾಜ್ಯಪಾಲರು ಎರಡು ದಿನಗಳ ಕಾಲ ಬೆಂಗಳೂರು ಹೊರಗಿರುವುದರಿಂದ, ಅಧಿಕೃತ ಮಾಹಿತಿ ಬಂದ ನಂತರವೇ ಅವರು ಹಿಂದಿರುಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.
ಗುರುವಾರ ಪ್ರಮಾಣವಚನ
ರಾಹುಲ್ ಗಾಂಧಿ ಜೊತೆ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಇಂದು ರಾತ್ರಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲೇ ಸಚಿವರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಗುರುವಾರ ಅಪರಾಹ್ನ ಲೋಕಭವನದಲ್ಲಿ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
20 ಸ್ಥಾನಗಳ ಪೈಕಿ 18 ಸಚಿವರ ಪಟ್ಟಿ ಅಂತಿಮ
ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಸೋಮವಾರವೇ ದೆಹಲಿಗೆ ತಲುಪಿದ್ದರು. ಖಾಲಿ ಇರುವ 20 ಸ್ಥಾನಗಳ ಪೈಕಿ 18 ಸಚಿವರ ಪಟ್ಟಿಯನ್ನು ಮಾತ್ರ ಅಂತಿಮಗೊಳಿಸಿ, ಎರಡು ಸ್ಥಾನಗಳನ್ನು ಖಾಲಿ ಇಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.