ಮಂಗಳೂರು: ವಿಧಾನಸಭೆಯ ಸಭಾಧ್ಯಕ್ಷರಾಗಿದ್ದ ಯು.ಟಿ. ಖಾದರ್ ಅವರು ತಮ್ಮ ಸಾಂವಿಧಾನಿಕ ಹುದ್ದೆಗೆ ರಾಜೀನಾಮೆ ನೀಡಿ, ರಾಜ್ಯ ಸಚಿವ ಸಂಪುಟ ಸೇರಿರುವುದು ಕರಾವಳಿ ಭಾಗದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ.
ಖಾದರ್ ಅವರ ಉಪಸ್ಥಿತಿಯಿಂದ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಬಲಗೊಳ್ಳುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹೊಸ ವೇಗ ಸಿಗಲಿದೆ ಎಂಬ ನಿರೀಕ್ಷೆ ಕಾಂಗ್ರೆಸ್ ವಲಯದಲ್ಲಿ ವ್ಯಕ್ತವಾಗಿದೆ.
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ನ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ ಖಾದರ್, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿದ್ದಾರೆ. ಆದರೆ, ವಿಧಾನಸಭಾಧ್ಯಕ್ಷರಾಗಿದ್ದ ಅವಧಿಯಲ್ಲಿ ಆ ಹುದ್ದೆಗೆ ಸಂಬಂಧಿಸಿದ ಸಂವಿಧಾನಾತ್ಮಕ ತಟಸ್ಥತೆಯ ಕಾರಣದಿಂದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.
ಈ ಕಾರಣದಿಂದಾಗಿ ಕರಾವಳಿ ಭಾಗದಲ್ಲಿ ಬಿಜೆಪಿ ವಿರುದ್ಧ ಪಕ್ಷದ ಹೋರಾಟಕ್ಕೆ ನಿರೀಕ್ಷಿತ ಮಟ್ಟದ ಬಲ ಸಿಗಲಿಲ್ಲ ಎಂಬ ಅಭಿಪ್ರಾಯ ಕಾಂಗ್ರೆಸ್ನ ಕೆಲ ನಾಯಕರಲ್ಲಿತ್ತು. ಇದೀಗ ಖಾದರ್ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ.
ಈ ನಡುವೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ನೀಡುವಂತೆ ಪಕ್ಷದ ನಾಯಕತ್ವವನ್ನು ಒತ್ತಾಯಿಸುತ್ತಿದ್ದಾರೆ.
ಹಾಗಾದಲ್ಲಿ ಜಿಲ್ಲೆಗೆ ಸರ್ಕಾರದಲ್ಲಿ ಇನ್ನಷ್ಟು ಪ್ರಬಲ ಧ್ವನಿ ದೊರೆಯಲಿದ್ದು, ಹಲವು ಅಭಿವೃದ್ಧಿ ಯೋಜನೆಗಳನ್ನು ವೇಗವಾಗಿ ಜಾರಿಗೆ ತರಲು ಸಾಧ್ಯವಾಗಲಿದೆ ಎಂಬ ನಂಬಿಕೆ ವ್ಯಕ್ತವಾಗಿದೆ.
ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗಲೂ ಜಿಲ್ಲೆಯ ಅಭಿವೃದ್ಧಿ ವಿಚಾರಗಳಲ್ಲಿ ಖಾದರ್ ಮಹತ್ವದ ಪಾತ್ರ ವಹಿಸಿದ್ದರು. ವಿವಿಧ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಪಕ್ಷದ ಮುಖಂಡರು ಸ್ಮರಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಸಂತೋಷ್ ಕುಮಾರ್ ಶೆಟ್ಟಿ ಅವರ ಮಾತನಾಡಿ, ಸಚಿವರಾಗಿ ಖಾದರ್ ಅವರಿಗೆ ಈಗ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಅವಕಾಶ ದೊರೆಯಲಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ನೆಲೆಯನ್ನು ಗಟ್ಟಿಗೊಳಿಸುವಲ್ಲಿ ಹಾಗೂ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠ ನೆಲೆ ಹೊಂದಿರುವ ಹಿನ್ನೆಲೆಯಲ್ಲಿ ಖಾದರ್ ಅವರ ಸಚಿವ ಸಂಪುಟ ಸೇರ್ಪಡೆ ಕಾಂಗ್ರೆಸ್ಗೆ ಮಹತ್ವದ ರಾಜಕೀಯ ಬಲವನ್ನು ನೀಡುವ ಸಾಧ್ಯತೆ ಇದೆ. ಪಕ್ಷದ ಸಂಘಟನೆ ಮತ್ತು ಸರ್ಕಾರದ ನಡುವಿನ ಸಮನ್ವಯವನ್ನು ಹೆಚ್ಚಿಸುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರಯತ್ನಿಸಬಹುದು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
ಖಾದರ್ ಅವರ ಸಚಿವ ಸಂಪುಟ ಪ್ರವೇಶದಿಂದ ಕರಾವಳಿ ಭಾಗದ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ಸಿಕ್ಕಿದ್ದು, ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಸಂಘಟನೆಗೆ ಇದು ಎಷ್ಟು ಬಲ ನೀಡಲಿದೆ ಎಂಬುದರ ಕುರಿತು ಕುತೂಹಲ ಮೂಡಿಸಿದೆ.