ಬೆಂಗಳೂರು: ಜೂನ್ 18 ರಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಒಬ್ಬರು ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಮಪತ್ರ ಹಿಂಪಡೆಯಲು ಬುಧವಾರ ಕಡೆಯ ದಿನವಾದ ಹಿನ್ನೆಲೆಯಲ್ಲಿ ಕಣದಲ್ಲಿದ್ದ ಓರ್ವ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಶಾಲಾಕ್ಷಿಯವರು ತಿಳಿಸಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಭೋಸರಾಜು ಸೋಮಯ್ಯ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ನಾರಾಯಣ ಸಾ ಬಾಂಡಗೆ ಅವರ ಅಧಿಕಾರ ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಿತ್ತು. ತೆರವಾದ ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ದ್ವೈವಾರ್ಷಿಕ ಚುನಾವಣೆಯನ್ನು ಘೋಷಣೆ ಮಾಡಿತ್ತು.