ಬೆಂಗಳೂರು: ಬೆಂಗಳೂರು ಅಭಿವೃದ್ಧಿಯೇ ಸರ್ಕಾರದ ನಿಜವಾದ ಆದ್ಯತೆಯಾಗಿದ್ದರೆ, ಮುಖ್ಯಮಂತ್ರಿಗಳು ತಮ್ಮದೇ ಸಚಿವರಿಗೆ ಸಂಪೂರ್ಣ ಅಧಿಕಾರ ನೀಡಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, "ಸಂಪೂರ್ಣ ಅಧಿಕಾರ ನೀಡುವ ಉದ್ದೇಶವೇ ಇಲ್ಲದಿದ್ದರೆ ಸಚಿವರನ್ನು ನೇಮಿಸುವ ಅಗತ್ಯವೇನು?" ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇನ್ನೂ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಸ್ವೀಕರಿಸದಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಸಚಿವರ ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾಗಿರುವುದು ದೊಡ್ಡ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಬೆಂಗಳೂರಿನ ಕೆಲವೇ ಪ್ರಮುಖ ಸಂಸ್ಥೆಗಳ ಮೇಲಿನ ನಿಯಂತ್ರಣವನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯೇ ಉಳಿಸಿಕೊಳ್ಳಲು ಕಾರಣವೇನು? ಇದು ನಿಜವಾಗಿಯೂ ಉತ್ತಮ ಆಡಳಿತಕ್ಕಾಗಿ ಆಗಿದೆಯೇ ಅಥವಾ ನಗರದ ಭೂಮಿ, ಗುತ್ತಿಗೆಗಳು, ಸಂಪನ್ಮೂಲಗಳು ಹಾಗೂ ರಾಜಕೀಯ-ಆರ್ಥಿಕ ವ್ಯವಸ್ಥೆಯನ್ನು ನಿಯಂತ್ರಿಸುವ ಸಂಸ್ಥೆಗಳ ಮೇಲಿನ ಹಿಡಿತಕ್ಕಾಗಿ ಆಗಿದೆಯೇ?" ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಒಳಜಗಳದಲ್ಲಿ ತೊಡಗಿದ್ದು, ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಳೆ ಬಂದಾಗ ಉಂಟಾಗುವ ಪ್ರವಾಹ, ಗುಂಡಿಗಳ ರಸ್ತೆಗಳು ಹಾಗೂ ಹದಗೆಟ್ಟ ಮೂಲಸೌಕರ್ಯಗಳಿಂದ ನರಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
"ಮುಖ್ಯಮಂತ್ರಿಗಳು ಈ ಅಧಿಕಾರದ ಕಿತ್ತಾಟಕ್ಕೆ ಅಂತ್ಯ ಹಾಡಿ, ಬೆಂಗಳೂರಿನ ಆಡಳಿತ ಮತ್ತು ಅಭಿವೃದ್ಧಿಯತ್ತ ಗಮನ ಹರಿಸಬೇಕು" ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದೊಳಗಿನ ಅಧಿಕಾರ ಹಂಚಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಗಳ ಮೇಲಿನ ನಿಯಂತ್ರಣದ ವಿಚಾರ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದಕ್ಕೂ ವೇದಿಕೆಯಾಗಿದೆ.