ಬೆಂಗಳೂರು: ನಿನ್ನೆ ನಡೆದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡ ಮತದಾನ ನಡೆದಿದ್ದಕ್ಕೆ ಹೈಕಮಾಂಡ್ ನಾಯಕರು ರಾಜ್ಯಬಿಜೆಪಿ ನಾಯಕರ ಮೇಲೆ ಗರಂ ಆಗಿದ್ದು ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ– ಜೆಡಿಎಸ್ ಶಾಸಕರ ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್ಗೆ ಹೆಚ್ಚುವರಿಯಾಗಿ 11 ಮತಗಳು ಬಂದಿದ್ದು ಮೈತ್ರಿಗೆ ಸೋಲು ಮತ್ತು ತೀವ್ರ ಮುಜುಗರ ಉಂಟಾಗಿದೆ.ಇದು ಮುಂದಿನ ದಿನಗಳಲ್ಲಿ ಮೈತ್ರಿ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದ್ದು, ಬಿಜೆಪಿ ಅಡ್ಡ ಮತದಾನ ಮಾಡಿದ್ದಕ್ಕೆ ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಕೆಂಡಾಮಂಡಲವಾಗಿದ್ದು ವರದಿ ನೀಡುವಂತೆ ಸೂಚಿಸಿದೆ.
ಸಮಿತಿ ರಚನೆ
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಇದರ ತನಿಖೆಗಾಗಿ ಹಾಗೂ ತಪ್ಪಿತಸ್ಥರನ್ನು ಗುರುತಿಸಲು ಸಿ.ಟಿ. ರವಿ, ಎನ್. ಮಹೇಶ್ ಮತ್ತು ಮಹೇಶ್ ಟೆಂಗಿನಕಾಯಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿದೆ.
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಶಾಸಕರು ಅಡ್ಡ ಮತದಾನ ಮಾಡಿರುವುದು ಪಕ್ಷಕ್ಕೆ ದೊಡ್ಡ ಹಿನ್ನಡೆಯನ್ನುಂಟುಮಾಡಿದೆ. ಪಕ್ಷದ ನಿರೀಕ್ಷೆಯಂತೆ ಮತಗಳು ಬೀಳದೆ, 4 ರಿಂದ 5 ಬಿಜೆಪಿ ಶಾಸಕರು ಮತ್ತು 6 ರಿಂದ 7 ಜೆಡಿಎಸ್ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಹೈಕಮಾಂಡ್ ಗೆ ವರದಿ
ಈ ಅಡ್ಡ ಮತದಾನದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಯಾರ್ಯಾರು ಪಕ್ಷದ ಆದೇಶ ಉಲ್ಲಂಘಿಸಿದ್ದಾರೆ ಎಂಬ ಬಗ್ಗೆ ವರದಿ ನೀಡಲು ಹಿರಿಯ ನಾಯಕರ ತಂಡವನ್ನು ರಚಿಸಲಾಗಿದೆ. ರಾಜ್ಯ ನಾಯಕರು ಈ ಅಡ್ಡ ಮತದಾನದ ವಿಷಯದ ಬಗ್ಗೆ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ಗೆ ಸಮಗ್ರ ವರದಿಯನ್ನು ಸಲ್ಲಿಸಲಿದ್ದಾರೆ.