ಬೆಂಗಳೂರು: ನಾನು ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತ. ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿಲ್ಲ ಎಂದು ಶಾಸಕ ಭೈರತಿ ಬಸವರಾಜು ತಮ್ಮ ವಿರುದ್ಧ ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಸುದ್ದಿವಾಹಿನಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಶಾಸಕ ಭೈರತಿ ಬಸವರಾಜು, ಪಕ್ಷ ಯಾರಿಗೆ ಮತ ಹಾಕಲು ಹೇಳುತ್ತೋ ಅವರಿಗೆ ಮತ ಹಾಕಿದ್ದೇನೆ. ನಾನು ಯಾವುದೇ ಅಡ್ಡ ಮತದಾನ ಮಾಡಿಲ್ಲ. ನನ್ನ ವಿರುದ್ದ ಅಪಪ್ರಚಾರ ಮಾಡಲಾಗಿದೆ. ನನಗೆ ಅಡ್ಡ ಮತದಾನ ಮಾಡುವ ಅವಶ್ಯಕತೆ ಇಲ್ಲ. ನಾನು ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತ ಎಂದರು.
ನನ್ನ ಮೇಲೆ ಎಷ್ಟೇ ಕೇಸ್ ಇರಲಿ ಏನೇ ಇರಲಿ ಯಾವುದೇ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ. ಯಾವುದೇ ಆಮಿಷಗಳಿಗೆ ಒಳಗಾಗುವ ವ್ಯಕ್ತಿ ನಾನಲ್ಲ. ಅಡ್ಡಮತದಾನ ಮಾಡಿದವರ ವಿರುದ್ದ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.
ಭಾರತೀಯ ಜನತಾ ಪಾರ್ಟಿ ನನಗೆ ತಾಯಿ ಇದ್ದ ಹಾಗೆ, ನಾನು ಯಾವತ್ತು ಸಹ ಪಕ್ಷಕ್ಕೆ ದ್ರೋಹ ಮಾಡಿಲ್ಲ, ಮಾಡುವುದು ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಪಕ್ಷಕೋಸ್ಕರ ಒಬ್ಬ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ಪಕ್ಷದ ತತ್ವ ಸಿದ್ಧಾಂತಗಳನ್ನು, ಆದೇಶಗಳನ್ನು ಯಾವತ್ತು ಮೀರಿದವನಲ್ಲ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುವವನು ಅಲ್ಲ. ನಮ್ಮ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲೇ ಇಂದಿಗೂ ನಾನು ನಡೆಯುತ್ತಿದ್ದೇನೆ. ನನ್ನ ರಾಜಕೀಯ ಜೀವನ ಇರುವವರೆಗೂ ನಾನು ಭಾರತೀಯ ಜನತಾ ಪಾರ್ಟಿಯಲ್ಲೇ ಇರುತ್ತೇನೆ. ಪಕ್ಷದ ತತ್ವ ಸಿದ್ಧಾಂತದ ವಿರುದ್ಧ ಎಂದಿಗೂ ನಡೆದುಕೊಳ್ಳುವುದಿಲ್ಲ ಎಂದರು.