ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ಭೂಕಬಳಿಕೆ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಬುಧವಾರ ಮಾಡಿದೆ.
ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ "ಬಡವರಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ" ಎಂದು ಆರೋಪಿಸಿದರು.
ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರು ಮುನ್ನಡೆಸುತ್ತಿರುವ ಖಾಸಗಿ ಟ್ರಸ್ಟ್ಗೆ ಕರ್ನಾಟಕದಲ್ಲಿ 100 ಕೋಟಿ ರೂ. ಮೌಲ್ಯದ ಪ್ರಮುಖ ಸರ್ಕಾರಿ ಜಮೀನನ್ನು ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಲಾಗಿದೆ ಎಂದು ಭಂಡಾರಿ ಆರೋಪಿಸಿದರು.
ಖರ್ಗೆ ಕುಟುಂಬದ ವಿರುದ್ಧ ಮೂರು ಪ್ರಮುಖ ಭೂ ಹಗರಣಗಳ ವಿವರಗಳನ್ನು ಬಿಡುಗಡೆ ಮಾಡಿದ ಪ್ರದೀಪ್ ಭಂಡಾರಿ, ಸಿದ್ದಾರ್ಥ ವಿಹಾರ್ ಟ್ರಸ್ಟ್ ನಲ್ಲಿ ಕೇವಲ ಖರ್ಗೆ ಕುಟುಂಬದ ಸದಸ್ಯರು ಮಾತ್ರ ಇದ್ದಾರೆ. ಸಿದ್ದಾರ್ಥ ವಿಹಾರ್ ಟ್ರಸ್ಟ್ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಅವರ ಪುತ್ರ ಪ್ರಿಯಾಂಕ್ ಖರ್ಗೆ, ಖರ್ಗೆ ಅವರ ಅಳಿಯ ಮತ್ತು ಅವರ ಧರ್ಮಪತ್ನಿ ಸದಸ್ಯರಾಗಿದ್ದಾರೆ. ಇಡೀ ಕುಟುಂಬವೇ ಸೇರಿಕೊಂಡು ತಮ್ಮ ರಾಜಕೀಯ ಪ್ರಭಾವ ಹಾಗೂ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ವಿವಿಧೆಡೆ ಬಡವರ ಭೂಮಿಯನ್ನು ಲೂಟಿ ಮಾಡಿದೆ ಎಂದು ಆರೋಪಿಸಿದರು.
“ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 2024ರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ವತಿಯಿಂದ ‘ಏರೋಸ್ಪೇಸ್ ಮತ್ತು ಡಿಫೆನ್ಸ್ ಸಂಶೋಧನೆ ಮತ್ತು ಅಭಿವೃದ್ಧಿ’ ಹೆಸರಿನಲ್ಲಿ ಸಿದ್ದಾರ್ಥ ವಿಹಾರ್ ಟ್ರಸ್ಟ್ಗೆ ಭಾರಿ ಮೌಲ್ಯದ 5 ಎಕರೆ ಜಮೀನನ್ನು ಹಂಚಿಕೆ ಮಾಡಲಾಗಿದೆ. ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಬೇಕಿದ್ದ ಈ ಜಮೀನನ್ನು ಖರ್ಗೆ ಅವರ ಖಾಸಗಿ ಟ್ರಸ್ಟ್ಗೆ ನೀಡಲಾಗಿದ್ದು, ಇದರ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು 100 ಕೋಟಿ ರೂ.” ಎಂದು ಬಿಜೆಪಿ ಹೇಳಿದೆ.