ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರ ಸಮ್ಮುಖದಲ್ಲಿ ಚರ್ಚೆಗೆ ಬಂದರೆ ನಾನು ಈಗಲೂ ಸಿದ್ಧ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, "ಮುಖ್ಯಮಂತ್ರಿಗಳು ರೈತರೊಂದಿಗೆ ಕುಳಿತು ಮಾತನಾಡಲು ಬರಲಿ. ನಾನು ಕೂಡ ಬರುತ್ತೇನೆ. ರೈತರ ಜಮೀನು ಕಳೆದುಕೊಳ್ಳುವ ವಿಷಯದಲ್ಲಿ ನಾಲ್ಕು ಗೋಡೆಗಳ ಮಧ್ಯೆ ಸಭೆ ನಡೆಸುವುದಕ್ಕಿಂತ, ರೈತರ ಸಮ್ಮುಖದಲ್ಲೇ ಮುಕ್ತ ಚರ್ಚೆ ನಡೆಯಬೇಕು ಎಂದು ಹೇಳಿದರು.
ಬಿಡದಿ ಪ್ರದೇಶಕ್ಕೆ ಸಂಬಂಧಿಸದವರನ್ನು ಕರೆತಂದು ಪ್ರತಿಭಟನೆ ನಡೆಸಿಸುವ ಬದಲು, ನೈಜ ರೈತರೊಂದಿಗೆ ಸರ್ಕಾರ ಸಂವಾದ ನಡೆಸಬೇಕೆಂದು ಅವರು ಆಗ್ರಹಿಸಿದರು.
ಇದೇ ವೇಳೆ ಸರ್ಕಾರಕ್ಕೆ ರೈತರ ಹಿತಕ್ಕಿಂತ ರಿಯಲ್ ಎಸ್ಟೇಟ್ ವ್ಯವಹಾರವೇ ಮುಖ್ಯವಾಗಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಸರ್ಕಾರ ರೈತರ ಅಭಿಪ್ರಾಯವನ್ನು ಕಡೆಗಣಿಸಿ ಯೋಜನೆಯನ್ನು ಮುಂದುವರಿಸಿದರೆ, ಜೆಡಿಎಸ್ ಕಾನೂನು ಹೋರಾಟಕ್ಕೂ ಮುಂದಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಈ ಯೋಜನೆಯ ವಿರುದ್ಧ ಜೆಡಿಎಸ್ ಕಾನೂನು ಹೋರಾಟ ನಡೆಸಲಿದೆ. ಕಳೆದ 475 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅಂತಿಮವಾಗಿ ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಲಿದೆ. ಸಾವಿರಾರು ಕೋಟಿ ರೂಪಾಯಿ ಅಕ್ರಮಗಳಿಗೆ ಸರ್ಕಾರವೇ ದಾರಿ ಮಾಡಿಕೊಡುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡಲು ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "ನಾನು ಮುಖ್ಯಮಂತ್ರಿ ಆಗಿರುವುದನ್ನು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ" ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, "ನಾನೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದೇನೆ. ಅಕ್ಬರ್-ಬೀರ್ಬಲ್ ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಮಾತನಾಡಲಿ. ಈ ಯೋಜನೆ ಹಿನ್ನೆಲೆಯಲ್ಲಿ ಈಗಾಗಲೇ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
"ಒಕ್ಕಲಿಗ ಸಮುದಾಯವು ಜನರ ಹೆಸರಿನಲ್ಲಿ ಲೂಟಿ ಮಾಡಲು ಮುಖ್ಯಮಂತ್ರಿಯ ಸ್ಥಾನವನ್ನು ನೀಡಿಲ್ಲ," ಎಂದು ಟೀಕಿಸಿದರು.
ಕ್ರಾಸ್ ವೋಟಿಂಗ್ ವಿಚಾರ ಮುಗಿದ ಅಧ್ಯಾಯ
ಜೂನ್ 18ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ನ 12ಕ್ಕೂ ಹೆಚ್ಚು ಎನ್ಡಿಎ ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, "ಆ ಅಧ್ಯಾಯ ಮುಗಿದಿದೆ. ಆ ವಿಚಾರಕ್ಕೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಅದರ ಬಗ್ಗೆ ಮತ್ತಷ್ಟು ಚರ್ಚೆ ಮಾಡುವ ಅಗತ್ಯವಿಲ್ಲ," ಎಂದು ಸ್ಪಷ್ಟಪಡಿಸಿದರು.