ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಕಳೆದ ಎರಡು-ಮೂರು ತಿಂಗಳಿನಿಂದಲೇ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಭಾನುವಾರ ನಡೆದ ಜೆಡಿಎಸ್ ಮಹಿಳಾ ಘಟಕದ ಸಭೆಯಲ್ಲಿ ಹೆಬ್ಬಾಳ ಹಾಗೂ ಬನಶಂಕರಿ ಭಾಗದ ನೂರಾರು ಮಹಿಳೆಯರು ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು ಮಾತನಾಡಿದರು.
ಇದು ಇಂದಿನಿಂದ ಆರಂಭವಾದ ಕೆಲಸವಲ್ಲ. ಕಳೆದ ಕೆಲವು ತಿಂಗಳಿನಿಂದ ನಿರಂತರವಾಗಿ ಪಕ್ಷ ಸಂಘಟನೆಯ ಕೆಲಸ ನಡೆಯುತ್ತಿದೆ. ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದ ಅವರು, ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದರು.
ಬೆಂಗಳೂರು ನಗರದಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಅದರ ಬಳಿಕ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರ ಒಂದು ಅಥವಾ ಎರಡು ತಿಂಗಳೊಳಗೆ ನಡೆಸಲೇಬೇಕಾಗಿದೆ ಎಂದು ಹೇಳಿದರು.
ಜೆಡಿಎಸ್ ಈಗಾಗಲೇ ರಾಜ್ಯಾದ್ಯಂತ ತಳಮಟ್ಟದ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ 10ರಿಂದ 15 ದಿನಗಳೊಳಗೆ ಮೈತ್ರಿ ಪಕ್ಷ ಬಿಜೆಪಿ ಜೊತೆಗೆ ಜಂಟಿ ಸಮನ್ವಯ ಸಮಿತಿಯನ್ನು ರಚಿಸಿ, ಬಾಕಿ ಉಳಿದಿರುವ ಎಲ್ಲಾ ಸಮನ್ವಯದ ವಿಚಾರಗಳನ್ನು ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.